ದಾವಣಗೆರೆಯಲ್ಲಿ ಕೇರಳ ಸಿಎಂ ಪ್ರತಿಕೃತಿ ದಹನ

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇರಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೆಲ ಸಂಘಟನೆಗಳು ಮತ್ತು ರಾಜಕಾರಣಿಗಳು ಅವರ ವಾಹನಕ್ಕೆ ಅಡ್ಡಗಟ್ಟಿ ಕಪ್ಪುಬಾವುಟ ತೋರಿಸಿ ಉದ್ದಟತನ ಮೆರದಿದ್ದವು.

ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ದಾವಣಗೆರೆಯ ಜಯದೇವ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರ ಈ ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕೇರಳದಿಂದ ಬರುವ ವ್ಯಕ್ತಿಯಾಗಲಿ ಅಥವಾ ಸರಕನ್ನಾಗಲಿ ಯಾವುದಕ್ಕೂ ಅವಕಾಶ ಮಾಡಿಕೊಡುವುದಿಲ್ಲ, ಕೇರಳ ಸರ್ಕಾರ ಕ್ಷಮೆಯಾಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಕೇರಳದಲ್ಲಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಆಗುತ್ತಿರುವುದು ಖಂಡನೀಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅವಮಾನ ಮಾಡಿರುವುದು ಇಡೀ ರಾಜ್ಯಕ್ಕೆ ಅವಮಾನ ಮಾಡಿದಂತೆ ಆಗಿದೆ. ಶಾಂತಿಪ್ರಿಯರಾಗಿರುವ ಕನ್ನಡಿಗರು ತಾಳ್ಮೆಯಿಂದ ವರ್ತಿಸಿದ್ದಾರೆ. ಆದರೆ ಇದು ಒಂದು ವ್ಯವಸ್ಥಿತ ಸಂಚು. ಇದಕ್ಕೆ ಕೇರಳ ಸರ್ಕಾರವೇ ಕುಮ್ಮಕ್ಕು ನೀಡಿದೆ ಎಂದು ಆರೋಪಿಸಿದರು.

ಭಾಷಾ ದ್ವೇಷಕ್ಕೆ ಮುನ್ನುಡಿ ಬರೆದಿರುವ ಕೇರಳ ಸರ್ಕಾರ ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಎಂದರು. ಕೇರಳ ಸರ್ಕಾರ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಬಳಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕರರು ಒತ್ತಾಯಿಸಿದರು. ಈ ವೇಳೆ ಪ್ರತಿಭಟನಾಕರು ಜಯದೇವ ವೃತ್ತದಿಂದ ಮೆರವಣಿಗೆಯ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Comments

Leave a Reply

Your email address will not be published. Required fields are marked *