ನಿನ್ನೆ ಹಾಸನದಲ್ಲಿ ಪ್ರಜ್ವಲ್ ಪಟ್ಟಾಭಿಷೇಕ – ಇಂದು ಮಂಡ್ಯದಲ್ಲಿ ನಿಖಿಲ್‍ಗೆ ಟಿಕೆಟ್ ಪಕ್ಕಾ..!

-ತರಾತುರಿಯಲ್ಲಿ ರಾತ್ರಿಯಿಡೀ ವೇದಿಕೆ ಸಿದ್ಧ

ಮಂಡ್ಯ: ಬುಧವಾರಷ್ಟೇ ಹಾಸನದಲ್ಲಿ ಹಿರಿಯ ಮೊಮ್ಮಗ ಪ್ರಜ್ವಲ್‍ಗೆ ಪಟ್ಟಾಭಿಷೇಕ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರು ಇಂದು ಕಿರಿಯ ಮೊಮ್ಮಗನ ಪಟ್ಟಾಭಿಷೇಕಕ್ಕೆ ಅಣಿಯಾಗಿದ್ದಾರೆ. ಮಂಡ್ಯದಲ್ಲಿಂದು ನಿಖಿಲ್ ಕುಮಾರಸ್ವಾಮಿ ಹೆಸರನ್ನ ಅಧಿಕೃತವಾಗಿ ಘೋಷಿಸಲಾಗುತ್ತಿದ್ದು, ಇದಕ್ಕಾಗಿ ಬೃಹತ್ ಸಮಾವೇಶ ನಡೆಯಲಿದೆ.

ಇಂದು ಮಂಡ್ಯದಲ್ಲಿ ಸ್ವತಃ ದೇವೇಗೌಡರೇ ನಿಖಿಲ್ ಕುಮಾರಸ್ವಾಮಿಯನ್ನು ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮದ್ದೂರಿನಿಂದ ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿಯನ್ನು ಬೃಹತ್ ಬೈಕ್ ರ‍್ಯಾಲಿಯಲ್ಲಿ ಸಮಾವೇಶದ ಸ್ಥಳಕ್ಕೆ ಕರೆತರಲು ವ್ಯವಸ್ಥೆ ಮಾಡಲಾಗಿದೆ. ಜೆಡಿಎಸ್ ಕಾರ್ಯಕ್ರಮವಾದ್ದರಿಂದ ಸಿಎಂ ಸಹಿತ ಪಕ್ಷದ ನಾಯಕರಷ್ಟೇ ಭಾಗಿಯಾಗಲಿದ್ದಾರೆ.

ಇನ್ನು ತರಾತುರಿಯಲ್ಲಿ ಕಾರ್ಯಕ್ರಮ ಘೋಷಣೆ ಆಗಿರುವುದರಿಂದ ಇಡೀ ರಾತ್ರಿ ವೇದಿಕೆ ನಿರ್ಮಾಣ ಕಾರ್ಯ ನಡೆದಿದೆ. ಕಾರ್ಯಕ್ರಮದ ಉಸ್ತುವಾರಿಯನ್ನು ಸಚಿವ ಪುಟ್ಟರಾಜು ಹೆಗಲಿಗೆ ವಹಿಸಲಾಗಿದೆ. ಹೀಗಾಗಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಸಚಿವರು ಅಂತಿಮ ಹಂತದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಪುಟ್ಟರಾಜು, ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಅಧಿಕೃತವಾಗಿ ಘೋಷಣೆಯಾಗಿರುವುದರಿಂದ ಕಾಂಗ್ರೆಸ್ ಮುಖಂಡರು ಒಮ್ಮತದಿಂದ ಬೆಂಬಲಿಸಲಿದ್ದಾರೆ ಎಂದಿದ್ದಾರೆ.

ಇತ್ತ ಸುಮಲತಾ ಅಂಬರೀಶ್ ಇಂದು ಕೂಡ ಮಂಡ್ಯದಲ್ಲಿ ಪ್ರವಾಸ ಮುಂದುವರಿಸಲಿದ್ದು, ಮೇಲುಕೋಟೆ ಚಲುವನಾರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಪ್ರಚಾರ ಆರಂಭಿಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *