ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಹಠ ಯೋಗಕ್ಕೆ ಆಹ್ವಾನಿಸಿರಲಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಯೂಟರ್ನ್ ಹೊಡೆದಿದ್ದಾರೆ.

ಚುನಾವಣಾ ಆಯೋಗ ನೀಡಿರುವ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರು, ಹಠ ಯೋಗ ಕ್ಯಾಂಪ್‍ಗೆ ಬರುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರು ಪತ್ನಿಯ ಸಮೇತ ಬಂದು ಪೂಜೆಯಲ್ಲಿ ಭಾಗವಹಿಸಿದ್ದು ನನಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ದಾನಿಗಳಿಂದ ಹಣ ಸಂಗ್ರಹಿಸಿ ಹಠ ಯೋಗ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಕಂಪ್ಯೂಟರ್ ಬಾಬಾ ಅವರ ಮೂಲ ಹೆಸರು ನಾಮ್‍ದಾಸ್ ತ್ಯಾಗಿ. ಅವರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌವ್ಹಾನ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದರು. ಆದರೆ ಭೋಪಾಲ್‍ನ ಸಫಿಯಾ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಗೆಲುವಿಗಾಗಿ ಹಠ ಯೋಗ ಕ್ಯಾಂಪ್ ಮಾಡಿದ್ದರು.

ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಕಂಪ್ಯೂಟರ್ ಬಾಬಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷ ಸರ್ಕಾರ ನಡೆಸಿದರೂ ರಾಮ ಮಂದಿರ ನಿರ್ಮಾಣ ಮಾಡಲಿಲ್ಲ. ರಾಮ ಮಂದಿರ ಇಲ್ಲವೆಂದ ಮೇಲೆ ಮೋದಿಯೂ ಇಲ್ಲ ಎಂದು ಹೇಳಿದ್ದರು. ಈ ಸಂಬಂಧ ಬಿಜೆಪಿಯು ಕಂಪ್ಯೂಟರ್ ಬಾಬಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾಸಿಂಗ್ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಈ ನಾಯಕರ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿದೆ. ಮಧ್ಯಪ್ರದೇಶದ ಸಾಗರ್, ಭೋಪಾಲ್ ಸೇರಿದಂತೆ 8 ಲೋಕಸಭಾ ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದೆ.

Comments

Leave a Reply

Your email address will not be published. Required fields are marked *