ಉಗ್ರರ ದಾಳಿಯನ್ನ ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ: ಗುಂಡೂರಾವ್

– ದೇಶಪ್ರೇಮವನ್ನ ಕೆಲ ಸಂಘಟನೆಗಳು ಗುತ್ತಿಗೆಗೆ ಪಡೆದಿವೆ
– ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯ ಏನಿತ್ತು?
– ಶರೀಫ್ ಭೇಟಿ ಮಾಡಿದ್ದ ಮೋದಿಗೆ ಖಾದರ್ ಪ್ರಶ್ನೆ

ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಬಿಜೆಪಿಯವರು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಗಮನ ಲೋಕಸಭಾ ಚುನಾವಣೆ ಮೇಲಿದೆ. ಮತವನ್ನು ಹೇಗೆ ಪಡೆಯಬೇಕು ಎನ್ನುವ ಸವಾಲು ಅವರ ಮುಂದಿದೆ. ಹೀಗಾಗಿಯೇ ದಾಳಿಯನ್ನ ತಮಗೆ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದ್ದಾರೆ. ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ದೂರಿದರು.

ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಾತನಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪ್ರಚಾರ ಪಡೆದುಕೊಂಡಿದ್ದಾರೆ ಅಷ್ಟೇ. ಅವರೇನು ಪಾಕಿಸ್ತಾನವನ್ನ ಮಟ್ಟ ಹಾಕಿದ್ದರಾ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ಅವರ ಸರ್ಕಾರದ ಅವಧಿಯಲ್ಲೇ ಆತಂಕಕಾರಿ ಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆದಿವೆ ಎಂದು ಆರೋಪಿಸಿದರು.

ದೇಶದಲ್ಲಿರುವ ಪ್ರತಿಯೊಬ್ಬರೂ ದೇಶ ಪ್ರೇಮಿಗಳೇ. ಆದರೆ, ಬಿಜೆಪಿಯವರು ಮಾತು ಆರಂಭಿಸಿದರೆ ನಾವೇ ದೇಶ ಪ್ರೇಮಿಗಳೆಂದು ಹೇಳಿಕೊಳ್ಳುತ್ತಾರೆ. ದೇಶಪ್ರೇಮದ ಬಗ್ಗೆ ಯಾರೇ ಮಾತನಾಡಿದರೂ ಅವರನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ. ಕೆಲ ಸಂಘಟನೆಗಳಂತೂ ದೇಶಪ್ರೇಮವನ್ನ ಗುತ್ತಿಗೆಗೆ ತೆಗೆದುಕೊಂಡತೆ ವರ್ತಿಸುತ್ತಿವೆ. ಈ ಮೂಲಕ ದೇಶದಲ್ಲಿ ದ್ವೇಷದ ವಾತಾವರಣ ಮೂಡಿಸುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತೇ? ವಿರೋಧಿಗಳ ಜೊತೆ ಸ್ನೇಹ ಬಯಸಬೇಕಿತ್ತಾ? ವಿರೋಧಿಗಳು ಎನ್ನುವುದು ಗೊತ್ತಿದ್ದರೂ ಅಲ್ಲಿಗೆ ಹೋಗಿದ್ದು ಸರಿಯಲ್ಲ. ಅಲ್ಲಿಂದ ಇಲ್ಲಿಗೆ ಬಂದು ಸೀರೆ ಕೊಡುವುದೂ ಬೇಕಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯವಾಡಿದರು.

ಪುಲ್ವಾಮಾದಲ್ಲಿ ದಾಳಿ ಉಗ್ರರ ವಿರುದ್ಧ ಕ್ರಮಕೈಗೊಳ್ಳುವ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ದೇಶದ ಅಖಂಡತೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *