ಅನರ್ಹರಿಗೆ ಬಿಗ್‍ಶಾಕ್ – ಅನರ್ಹ ಶಾಸಕರ ಮುಂದಿನ ಆಯ್ಕೆಗಳೇನು?

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪೀಕರ್ ಅವರಿಂದ ಅನರ್ಹರಾಗಿದ್ದ ಶಾಸಕರಿಗೆ ಭಾರೀ ಹಿನ್ನಡೆಯಾಗಿದ್ದು, 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.

ಇಂದು ಹರಿಯಾಣ, ಮಹಾರಾಷ್ಟ್ರ ಚುನಾವಣೆ ದಿನಾಂಕ ಘೋಷಣೆ ಮಾಡಿದ ಸಂದರ್ಭದಲ್ಲೇ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಅವರು ಕರ್ನಾಟಕದಲ್ಲೂ 15 ಕ್ಷೇತ್ರಗಳಿಗೆ ಉಪುಚುನಾವಣೆ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.

ಶಾಸಕ ಸ್ಥಾನದ ಅನರ್ಹತೆಯನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟಿನಲ್ಲಿ ಅನರ್ಹರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ತ್ವರಿತ ವಿಚಾರಣೆಗೆ ನಿರಾಕರಿಸಿತ್ತು. ಅಲ್ಲದೇ ಸೋಮವಾರ ಪ್ರಕರಣ ವಿಚಾರಣೆಗೆ ಬಂದರೂ ಕೂಡ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಪ್ರಕರಣ ವಿಚಾರಣೆ ಮುಂದೂಡಲಾಗಿತ್ತು. ಈಗ ಸೆ.22ಕ್ಕೆ ವಿಚಾರಣೆ ನಡೆಯಲಿದ್ದು, ವಿಚಾರಣೆ ದೀರ್ಘ ಸಮಯ ತಗೆದುಕೊಂಡರೆ ಅತಂತ್ರರು ಚುನಾವಣೆ ನಿಲ್ಲುವ ಕನಸು ಭಗ್ನಗೊಳ್ಳಲಿದೆ. ಇದನ್ನು ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

ರಾಜ್ಯಗಳಲ್ಲಿ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಸೆ.23 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಮಾಡಲು ಸೆ.30 ಅಂತಿಮ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 03 ಕಡೆಯ ದಿನಾಂಕವಾಗಿದೆ. ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಲಭ್ಯವಾಗಲಿದೆ. ಸೆ.30ರ ಒಳಗಡೆ ಪ್ರಕರಣ ಇತ್ಯರ್ಥವಾಗದಿದ್ದರೆ ಅನರ್ಹರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲಾ ಅನರ್ಹ ಶಾಸಕ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಇದನ್ನು ಓದಿ: ಬೈ ಎಲೆಕ್ಷನ್ ಘೋಷಣೆ ಬೆನ್ನಲ್ಲೇ ಮೈತ್ರಿ ಮುರಿದ ಹೆಚ್‍ಡಿಕೆ

ಮುಂದಿನ ಆಯ್ಕೆಗಳೇನು?
ವಿಧಾನಸಭಾ ಅವಧಿ ಪೂರ್ಣಗೊಳ್ಳುವವರೆಗೂ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡಬಾರದು ಎಂದು ಸ್ಪೀಕರ್ ತೀರ್ಪು ನೀಡಿರುವುದರಿಂದ ಅನರ್ಹ ಶಾಸಕರು ಸೋಮವಾರ ನಡೆಯಲಿರುವ ವಿಚಾರಣೆ ವೇಳೆ ಕೋರ್ಟಿನಲ್ಲಿ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ಕೇಳಬಹುದು ಅಥವಾ ವಿಚಾರಣೆ ಪೂರ್ಣಗೊಳ್ಳುವ ವರೆಗೆ ಚುನಾವಣೆ ನಡೆಸದಂತೆ ಆದೇಶಿಸಿ ಎಂದು ಮನವಿ ಮಾಡಿಕೊಳ್ಳಬಹುದು.

Comments

Leave a Reply

Your email address will not be published. Required fields are marked *