ಮಹಾರಾಷ್ಟ್ರದಲ್ಲಿ ರಾಹುಲ್ ಗಾಂಧಿಗೆ ಮತ್ತೊಂದು ಆಘಾತ

ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಆಘಾತಗಳ ಮೇಲೆ ಆಘಾತ ಎದುರಿಸುತ್ತಿದೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಕಾಳಿದಾಸ್ ಕೊಲಂಬ್ಕರ್ ಅವರು ಬಿಜೆಪಿಯನ್ನು ಹಾಡಿ ಹೊಗಳಿದ್ದಾರೆ.

ಕಾಂಗ್ರೆಸ್‍ನಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ವಡಾರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಆದರೆ ಕೆಲವು ಕೆಲಸಗಳನ್ನು ಸಿಎಂ ದೇವೇಂದ್ರ ಫಡ್ನವಿಸ್ ಅವರ ನೇತೃತ್ವದ ಬಿಜೆಪಿ ಸರ್ಕಾರದ ಗಮನಕ್ಕೆ ತಂದಿದ್ದೆ. ತಕ್ಷಣವೇ ಕ್ರಮಕೈಗೊಂಡ ಸಿಎಂ ವಡಾರಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಕಾಳಿದಾಸ್ ಕೊಲಂಬ್ಕರ್ ತಿಳಿಸಿದ್ದಾರೆ. ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಡಬಲ್ ಶಾಕ್ 

ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದವರ ಫೋಟೋ ಹಾಕಬೇಕೋ? ಅಥವಾ ಯಾವುದೇ ಕೆಲಸ ಮಾಡದವರ ಫೋಟೋ ಹಾಕಬೇಕೋ ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಹೇಳಿಕೆಯಿಂದಾಗಿ ಶಾಸಕರು ವಿರೋಧ ಪಕ್ಷ (ಕಾಂಗ್ರೆಸ್) ತೊರೆದು, ಆಡಳಿತ ರೂಢ ಪಕ್ಷ (ಬಿಜೆಪಿ) ಸೇರ್ಪಡೆಯಾಗುವ ಇಚ್ಛೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಕಾಳಿದಾಸ್ ಕೊಲಂಬ್ಕರ್ ಅವರು, ಮುಂಬೈ ನಗರದ ವಡಾಲಾ ಕ್ಷೇತ್ರದ ಶಾಸಕರಾಗಿದ್ದಾರೆ.

ಮಾಧ್ಯಮವೊಂದರ ವರದಿಯ ಪ್ರಕಾರ ದಾದರ್ ನ ಬಿಜೆಪಿ ಕಚೇರಿಯಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲೇ ಬಿಜೆಪಿ ಸೇರಲು ಶಾಸಕ ಕೊಲಂಬ್ಕರ್ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ನಾನು ಕಾಂಗ್ರೆಸ್‍ನಲ್ಲಿ ಉಳಿದುಕೊಳ್ಳಲು ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಸಿಎಂ ಫಡ್ನವಿಸ್ ಶ್ರಮಿಸುತ್ತಿದ್ದಾರೆ ಶಾಸಕರು ತಿಳಿಸಿದ್ದಾರೆ.

ಈ ಬೆಳವಣಿಗೆಯಿಂದಾಗಿ ಕೊಲಂಬ್ಕರ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಡಾಲಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಇತ್ತ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಕೂಡ ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಪುತ್ರ ಸುಜಯ್ ಅವರ ಹಾದಿಯಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಲೋಕಸಭಾ ಚುನಾವಣೆ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ನಿಂದ ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚಾಗುತ್ತಿ, ಕಾಂಗ್ರೆಸ್ಸಿಗೆ ಭಾರೀ ಪರಿಣಾಮ ಬೀರುವ ಸಾಧ್ಯತೆಯಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *