ಯತ್ನಾಳ್ ಮನುಷ್ಯ ಜಾತಿಗೆ ಸೇರಿದವರೇ ಅಲ್ಲ: ಖಂಡ್ರೆ ಕೆಂಡಾಮಂಡಲ

ಬೀದರ್: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರನ್ನು ಪಾಕ್ ಏಜೆಂಟ್ ಎಂದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಇಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿ ಯತ್ನಾಳ್ ಮನುಷ್ಯ ಜಾತಿಗೆ ಸೇರಿದವರೇ ಅಲ್ಲ ಎಂದು ಕಿಡಿಕಾರಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಸುದ್ದಿಗೋಷ್ಠಿ ಮಾಡಿದ ಖಂಡ್ರೆ, ಈ ದೇಶಕ್ಕಾಗಿ ಹೋರಾಟ ಮಾಡಿದ ಶತಾಯುಷಿ ಬಗ್ಗೆ ನಕಲಿ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಎಂದು ಹುಚ್ಚು ಹುಚ್ಚಾಗಿ ಹೇಳಿಕೆ ಕೊಟ್ಟಿದ್ದು ಅತ್ಯಂತ ಖಂಡನೀಯವಾಗಿದೆ. ಇದು ಬರಿ ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡಿದ ಅಪಮಾನವಲ್ಲ, ದೇಶದ 130 ಕೋಟಿ ಜನರಿಗೆ ಮಾಡಿದ ದ್ರೋಹವಾಗಿದೆ. ಹೀಗೆ ಮಾತನಾಡುವ ಯತ್ನಳ್ ಮನುಷ್ಯ ಜಾತಿಗೆ ಸೇರಿದವರೇ ಅಲ್ಲ. ಇದು ದೇಶದ್ರೋಹದ ಹೇಳಿಕೆ ಎಂದು ವಾಗ್ದಾಳಿ ನಡೆಸಿದರು.

ಒಬ್ಬ ಹಿರಿಯ ವಯೋವೃದ್ಧರಿಗೆ ಏಕ ವಚನದಲ್ಲಿ ಹೇಳಿಕೆ ನೀಡಿದ್ದು ಅಮಾನವೀಯ ಹಾಗೂ ಲಜ್ಜೆಗೆಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯತ್ನಾಳ್‍ರನ್ನು ಕೂಡಲೆ ಶಾಸಕ ಸ್ಥಾನದಿಂದ ಉಚ್ಛಾಟನೆ ಮಾಡಿ ಬಿಜೆಪಿ ಅವರ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು ಎಂದು ಬೀದರ್ ನಲ್ಲಿ ಖಂಡ್ರೆ ಹರಿಹಾಯ್ದರು.

ಯತ್ನಾಳ್ ಹೇಳಿದ್ದೇನು?
ಮಂಗಳವಾರ ವಿಜಯಪುರದಲ್ಲಿ ಯತ್ನಾಳ್ ಅವರು ದೊರೆಸ್ವಾಮಿ ವಿರುದ್ಧ ಹೇಳಿಕೆ ಕೊಟ್ಟಿದ್ದರು. ಮಾಧ್ಯಮಗಳ ಜೊತೆ ಮಾತನಾಡುತ್ತಾ, ದೇಶದ್ರೋಹಿ ಘೋಷಣೆ ಹಾಗೂ ಫೇಸ್‍ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಖಡಕ್ ವಾರ್ನಿಂಗ್ ನೀಡಿದ್ದರು. ದೇಶದ್ರೋಹಿಗಳಿಗೆ ಬೀಳುತ್ತವೆ ಗುಂಡೇಟು, ದೇಶದ್ರೋಹಿಗಳೇ ಹುಷಾರ್. ಇನ್ನು ಮುಂದು ಹಾಗೆಲ್ಲ ಮಾಡಿದರೆ ಗುಂಡೇಟು ಬೀಳುತ್ತವೆ. ಜೈಲಿಗೆ ಕಳುಹಿಸುವುದೆಲ್ಲ ಇಲ್ಲ, ಇನ್ಮೇಲೆ ದೇಶದ್ರೋಹದ ಹೇಳಿಕೆ ಕೊಟ್ಟರೆ ಅವರಿಗೆ ಗುಂಡು ಬೀಳುತ್ತೆ ಎನ್ನುವ ಮೂಲಕ ದೇಶದ್ರೋಹಿಗಳಿಗೆ ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲದೇ ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ. ಎಲ್ಲಿದ್ದಾನೆ ಆ ಮುತ್ಯಾ ಈಗ, ದೊರೆಸ್ವಾಮಿ ಪಾಕಿಸ್ತಾನ ಏಜೆಂಟ್. ಪಾಕಿಸ್ತಾನ ಏಜೆಂಟ್ರಂತೆ ದೊರೆಸ್ವಾಮಿ ಮಾತಾಡ್ತಿದ್ದಾನೆ ಎಂದು ಕಿಡಿಕಾರಿದ್ದರು.

Comments

Leave a Reply

Your email address will not be published. Required fields are marked *