ಕಾವೇರಿದ ವಿಧಾನಸಭಾ ಚುನಾವಣೆ: ರಾಹುಲ್ ಗಾಂಧಿ ವಿದೇಶ ಪ್ರವಾಸ

ನವದೆಹಲಿ: ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬ್ಯಾಂಕಾಕ್ ಪ್ರವಾಸ ಕೈಗೊಂಡು ಅಚ್ಚರಿಸಿ ಮೂಡಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಕೆಲ ದಿನಗಳ ಹಿಂದಷ್ಟೇ ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆ ಎದುರಿಸಲು ಭರ್ಜರಿ ಸಿದ್ಧತೆ ನಡೆದಿದ್ದಾರೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ರಾಹುಲ್ ಗಾಂಧಿ ಬ್ಯಾಂಕಾಕ್‍ಗೆ ತೆರಳಿದ್ದಾರೆ.

ಹರ್ಯಾಣ ಕಾಂಗ್ರೆಸ್‍ನ ಮಾಜಿ ರಾಜ್ಯಾಧ್ಯಕ್ಷ ಅಶೋಕ್ ತನ್ವಾರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ನನ್ನ ಹೋರಾಟ ವೈಯಕ್ತಿಕವಲ್ಲ, ಬಲದಲಿಗೆ ಈಗಿನ ಪಕ್ಷದ ವ್ಯವಸ್ಥೆ ವಿರುದ್ಧ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬುಧವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು.

ಇತ್ತ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಸಹ ಚುನಾವಣಾ ಪ್ರಚಾರದಿಂದ ದೂರ ಉಳಿಯುತ್ತೇನೆ ಎಂದು ಘೋಷಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಅಲ್ಲಿನ ನಾಯಕರ ನಡುವೆ ಭಿನ್ನಮತ ಹೆಚ್ಚಾಗುತ್ತಿರುವಗಲೇ ರಾಹುಲ್ ಗಾಂಧಿ ವಿದೇಶಕ್ಕೆ ಹಾರಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿರುವಾಗ ವಿದೇಶಕ್ಕೆ ಹೋಗಿದ್ದು ಎಷ್ಟು ಸರಿ? ಈ ರಾಜ್ಯಗಳ ಮುಖಂಡರ ನಡುವೆ ಭಿನ್ನಾಭಿಪ್ರಾಯಗಳು, ಅಸಮಾಧಾನಗಳನ್ನು ಬಗೆಹರಿಸದೇ ದೂರ ಉಳಿದಿದ್ದು ಯಾಕೆ ಎಂಬ ಪ್ರಶ್ನೆಗಳು ಪಕ್ಷದಲ್ಲಿ ಕೇಳಿ ಬರುತ್ತಿವೆ ಎನ್ನಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಲು ಸಾಧ್ಯವಾಗದೆ ಪಕ್ಷದ ಮುಖಂಡರು ಮೌನವಾಗಿ ಉಳಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Comments

Leave a Reply

Your email address will not be published. Required fields are marked *