ರೈತರ ಬೇಡಿಕೆಗಳಿಗೆ ಕೇಂದ್ರ ಅಸ್ತು: ದೆಹಲಿ ಚಲೋ ಶೀಘ್ರವೇ ಅಂತ್ಯ!

ನವದೆಹಲಿ: ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರೈತರು ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕೇಂದ್ರ ಬಗ್ಗಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದೆ.

ಉತ್ತರಪ್ರದೇಶದ ರೈತರು ಹಾಗೂ ಭಾರತೀಯ ಕಿಸಾನ್ ಸಂಘ(ಬಿಕೆಯು)ದ ವತಿಯಿಂದ ಇಂದು ಹಮ್ಮಿಕೊಂಡಿದ್ದ ದೆಹಲಿ ಚಲೋ, ಹಿಂಸಾತ್ಮಕ ರೂಪ ಪಡೆದಕೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದೆ.

ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಸಹಾಯಕ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವ ರಾಜನಾಥ್ ಸಿಂಗ್ ಬಿಕೆಯುದ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ರೈತರ ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಸಚಿವರಾದ ಲಕ್ಷ್ಮೀ ನಾರಾಯಣ್, ಸುರೇಶ್ ರಾಣಾರ ಜೊತೆ ನಾನು ರೈತರನ್ನು ಭೇಟಿಯಾಗಲು ಹೋಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಏನಿದು ಪ್ರತಿಭಟನೆ?
ಉತ್ತರ ಪ್ರದೇಶದ ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಸಾಲಮನ್ನಾ ಹಾಗು 15 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೆಹಲಿ ಚಲೋ ಪ್ರತಿಭಟನೆಯನ್ನು ಹರಿದ್ವಾರದಿಂದ ಹಮ್ಮಿಕೊಂಡಿದ್ದರು. ಘಾಜಿಯಾಪುರ ಮಾರ್ಗವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಆದರೆ ದೆಹಲಿ ಹಾಗೂ ಉತ್ತರ ಪ್ರದೇಶದ ಗಡಿಭಾಗ ಗಾಜೀಯಾಬಾದ್ ನಲ್ಲಿ ಬೃಹತ್ ಬ್ಯಾರಿಕೇಡ್‍ಗಳನ್ನು ಹಾಕುವ ಮೂಲಕ ಪೊಲೀಸರು ರೈತರ ಪ್ರತಿಭಟನೆಯನ್ನು ನಿಯಂತ್ರಿಸಿಲು ಯತ್ನಿಸಿದ್ದರು. ಆದರೆ ಸಾಗರೋಪಾದಿಯಲ್ಲಿ ಬಂದಿದ್ದ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ಗಳನ್ನು ತಮ್ಮ ಟ್ರ್ಯಾಕ್ಟರ್‍ಗಳ ಮೂಲಕ ಕೀಳಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಿದ್ದಲ್ಲದೇ, ಲಾಠಿ ಚಾರ್ಜ್ ಕೂಡಾ ಮಾಡಿದ್ದರು. ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆಯುವ ಮುನ್ಸೂಚನೆ ಅರಿತ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತುರ್ತು ಸಭೆ ಕರೆದಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=d0tIKjItZL0

 

Comments

Leave a Reply

Your email address will not be published. Required fields are marked *