ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ?, ಕೈಗೊಂಬೆ ಸರ್ಕಾರಕ್ಕಾ?: ಹೆಚ್‍ಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ಅವರು ಇದೀಗ ರಾಜ್ಯಸ ರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಹತ್ತನೇ ನಂಬರಿನ ಹಂಗಿನ ಸರ್ಕಾರ ಎದು ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‍ನಲ್ಲೇನಿದೆ..?: ರಾಜ್ಯದಲ್ಲಿರುವುದು ಸಿದ್ದರಾಮಯ್ಯ (Siddaramaiah) ನವರ ನೇತೃತ್ವದ ಸರ್ಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರ್ಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ? ಅಥವಾ ಕೈಗೊಂಬೆ ಸರ್ಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರ್ಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದಿದ್ದಾರೆ.

ಸರ್ಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರಿಗೆ ಸರ್ಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಹೆಚ್‍ಡಿಕೆ ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ. ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ. ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ. ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಬರೆದು ಹತ್ತನೇ ನಂಬರಿನ ಹಂಗಿನ ಸರ್ಕಾರ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.