KSRTC-ಕಾರ್ ಮುಖಾಮುಖಿ ಡಿಕ್ಕಿ – ಧರ್ಮಸ್ಥಳಕ್ಕೆ ಹೋಗ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 275ರ ಮಾರನಹಳ್ಳಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಜಗದೀಶ್(30), ಗೌರಮ್ಮ(45), ಚನ್ನಯ್ಯ(50) ಮತ್ತು ಭುವನ್(6) ಮೃತ ದುರ್ದೈವಿಗಳು.

ಮೃತರು ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳುತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ 275ರ ಮಾರನಹಳ್ಳಿ ಸಮೀಪ KSRTC ಮತ್ತು ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಬಾಲಕ ಮತ್ತು ಮಹಿಳೆಯೂ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಭವ್ಯ(16) ಮತ್ತು ನಾಗರತ್ನ (39) ಇಬ್ಬರಿಗೂ ಕೂಡ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಲ್ಲಿದ್ದ ಪ್ರಯಾಣಿಕರು ಹಾಗೂ ಕಾರ್ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದಾರೆ. ಆದರೆ ಅಂಬುಲೆನ್ಸ್ ಕರೆಯಲು ಸ್ಥಳದಲ್ಲಿ ನೆಟ್ವರ್ಕ್ ಇಲ್ಲದೆ ಸಾರ್ವಜನಿಕರು ಪರದಾಡಿದ್ದಾರೆ. ನಂತರ ಸಮೀಪದ ಸಕಲೇಶಪುರಕ್ಕೆ ತೆರಳಿ ಬಳಿಕ ಅಲ್ಲಿಂದ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೃತರನ್ನು ಬೆಂಗಳೂರು ನಗರದ ಯಶವಂತಪುರ ನಿವಾಸಿ ಮಹದೇವಸ್ವಾಮಿ ಮನೆಯವರು ಎನ್ನುವ ಮಾಹಿತಿ ದೊರೆತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಅಪಘಾತದಿಂದ ಸ್ಥಗಿತವಾಗಿದ್ದ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಗಿದೆ.

ಸಕಲೇಶಪುರ ಬಳಿ ಇರುವ ಶಿರಾಡಿ ಘಾಟ್‍ನಲ್ಲಿ ಯಾವುದೇ ಸಂದರ್ಭದಲ್ಲಿಯೂ ಅಪಘಾತ ಮತ್ತು ಅವಘಡಗಳು ಸಂಭವಿಸಿದೆ ಸಂದರ್ಭದಲ್ಲಿ ಮೊಬೈಲ್ ಕರೆಗಳಿಗೆ ನೆಟ್ವರ್ಕ್ ಸಮಸ್ಯೆ ಇದೆ. ಹೀಗಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ಮೊಬೈಲ್ ನೆಟ್ವರ್ಕ್ ದೊರಕುವಂತೆ ಮಾಡಬೇಕೆಂದು ಸ್ಥಳೀಯರ ಆಗ್ರಹವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *