ಕೃಷಿ ಸಚಿವರೇ ತೆವಲಿಗೆ ಮಾತಾಡಬೇಡಿ: ಎಚ್‍ಡಿಕೆ ಕಿಡಿ

ಮೈಸೂರು: ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೆವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿ.ಸಿ.ಪಾಟೀಲ್‌ಗೆ ಸಾಲ ಮನ್ನದ ಬಗ್ಗೆ ಮಾಹಿತಿಯೇ ಇಲ್ಲ. ಸಾಲ ಮನ್ನದ ಬಗ್ಗೆ ಆ ಕೃಷಿ ಸಚಿವರಿಗೆ ವಿಷಯವೇ ಗೊತ್ತಿಲ್ಲ ಅನ್ನಿಸುತ್ತೆ. ನಾನು ಅಧಿಕಾರದಿಂದ ಇಳಿಯುವಾಗ ಬರಿ ಘೋಷಣೆ ಮಾಡಿಲ್ಲ. ಬದಲಿಗೆ 25 ಸಾವಿರ ಕೋಟಿ ಹಣ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ನಾನು ಹೊಂದಿಸಿಕೊಟ್ಟಿದ್ದ 800 ಕೋಟಿ ಹಣವನ್ನ ಇನ್ನೂ ಬಿಡುಗಡೆ ಮಾಡದೆ ಹಾಗೆಯೇ ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು.

ನಾವು ರೈತರಿಂದ ಸರಳ ದಾಖಲೆ ಕೇಳಿದ್ವಿ. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸೋದು ಇಲಾಖೆ ಕೆಲಸ. ಅದನ್ನು ತೆವಲಿಗೆ ಮಾತನಾಡುವುದು, ಸುಳ್ಳು ಹೇಳಿಕೊಂಡು ಓಡಾಡೋದು ಬೇಡ ಎಂದರು.

ಇದೇ ವೇಳೆ ಬಿಜೆಪಿಯಿಂದ ಶಾದಿಭಾಗ್ಯ ಯೋಜನೆಗೆ ತಿಲಾಂಜಲಿ ಇಟ್ಟ ಬಗ್ಗೆ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೆ ಅಲ್ಲ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ ಮಾಡಿದೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ನಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಅಂತ ಗಲಾಟೆ ಮಾಡಿದ್ದಾರೆ. ಅಲ್ಲದೇ ಮಂತ್ರಿಯನ್ನ ಕೂರಿಸಿಕೊಂಡು ಅನುದಾನ ಕೊಡಿ ಅಂತ ಕೇಳಿದ್ದಾರೆ. ಸಿಎಂ ನೆರೆ ಹಾವಳಿಯ ಜನರಿಗೆ ಹಣ ಬಿಡುಗಡೆ ಮಾಡಿ ಅಂತ ಹೇಳಿದ್ದಾರೆ. ಆದರೂ ಅಧಿಕಾರಿಗಳು ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ ಎಂದು ಹೇಳಿದರು.

Comments

Leave a Reply

Your email address will not be published. Required fields are marked *