ಪ್ರವಾಸ ಮುಗಿಸಿ ಮರಳುತ್ತಿದ್ದ ಬೆಂಗ್ಳೂರಿನ ಇಬ್ಬರು ದುರ್ಮರಣ!

ಹಾಸನ: ಟಿಪ್ಪರ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ನಡೆದಿದೆ. ಬೆಂಗಳೂರು ಮೂಲದ ರಾಹುಲ್ (30) ಹಾಗೂ ಸಂಜಯ್ (35) ಮೃತರು. ಈ ಅವಘಡದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆಯ ವಿವರ:
ಹಾಸನ ಪ್ರವಾಸಕ್ಕೆಂದು ಬಂದಿದ್ದ ರಾಹುಲ್, ಸಂಜಯ್ ಹಾಗೂ ಅವರ ಸ್ನೇಹಿತನೊಬ್ಬ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರಿಗೆ ಹೊರಟಿದ್ದರು. ಇತ್ತ ಟಿಪ್ಪರ್ ಚಾಲಕ ದೊಡ್ಡಮನೆ ರೆಸಾರ್ಟ್ ನಿಂದ ಸಕಲೇಶಪುರ ಮಾರ್ಗವಾಗಿ ಮಂಗಳೂರಿಗೆ ಹೊರಟಿದ್ದ. ಈ ವೇಳೆ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಟಿಪ್ಪರ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಕಾರ್ ಚಾಲಕ ರಾಹುಲ್ ಹಾಗೂ ಪಕ್ಕದ ಸೀಟ್‍ನಲ್ಲಿ ಕುಳಿತಿದ್ದ ಸಂಜಯ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಹಿಂದೆ ಕುಳಿತಿದ್ದ ವ್ಯಕ್ತಿ ಬದುಕುಳಿದಿದ್ದಾನೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಕಲೇಶಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *