ಹಾಸನದಲ್ಲಿ ಆರಂಭವಾಗಿದೆ ಪಕ್ಷಾಂತರ ಪರ್ವ..!

ಹಾಸನ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಸನದಲ್ಲಿ ರಾಜಕೀಯ ಗರಿಗೆದರಿದೆ. ಒಂದು ಕಡೆ ಮಾಜಿ ಸಚಿವ ಎ.ಮಂಜು ಬಿಜೆಪಿ ಶಾಸಕ ಪ್ರೀತಮ್ ಗೌಡ ಮನೆಗೆ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಈ ಬೆನ್ನಲ್ಲೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನದ ಬಿಜೆಪಿ ನಗರಸಭಾ ಸದಸ್ಯರನ್ನ ಜೆಡಿಎಸ್ ಗೆ ಸೆಳೆದಿದ್ದು, ಪಕ್ಷಾಂತರ ಪರ್ವ ಆರಂಭವಾಗಿದೆ.

ಹಾಸನ ಜಿಲ್ಲೆಯು ರಾಷ್ಟ್ರ ರಾಜಕಾರಣದಲ್ಲಿ ಗಮನ ಸೆಳೆದಿದ್ದು, ಈಗಿನ ಚುನಾವಣೆ ಭಾರೀ ಜಿದ್ದಾಜಿದ್ದಿ ಲಕ್ಷಣಗಳು ಕಂಡುಬಂದಿದೆ. ಬಿಜೆಪಿಯಿಂದ ಮಾಜಿ ಸಚಿವ ಎ.ಮಂಜು ಸ್ಪರ್ಧಿಸಲಿದ್ದು ಇನ್ನೆರಡು ದಿನಗಳಲ್ಲಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ. ಅತ್ತ ಜೆಡಿಎಸ್ ನಿಂದ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅಭ್ಯರ್ಥಿಯಾಗಿರುವುದರಿಂದ ಭಾರೀ ಜಿದ್ದಾಜಿದ್ದಿ ಪಡೆದಿದೆ.

ಬೆಳಗ್ಗೆ ಮಾಜಿ ಸಚಿವ ಎ.ಮಂಜು ಶಾಸಕ ಪ್ರೀತಮ್ ಗೌಡ ಮನೆಗೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗಿಯಾಗಿ ಬಿಜೆಪಿ ಸೇರುವ ಬಗ್ಗೆ ಚರ್ಚೆ ನಡೆಸಿದ್ರು. ಬಿಜೆಪಿ ಕಾರ್ಯಕರ್ತರು ಕೂಡ ಎ.ಮಂಜುಗೆ ಸ್ವಾಗತ ಕೋರಿದ್ರು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಎರಡು ದಿನಗಳಲ್ಲಿ ನಿರ್ಧಾರ ಮಾಡಿ ಸೋಮವಾರ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಮಾಡುವುದಾಗಿ ಎ ಮಂಜು ಹೇಳಿದ್ದಾರೆ.

ಮಾಜಿ ಸಚಿವ ಎ.ಮಂಜು ಬಿಜೆಪಿ ಶಾಸಕನ ಮನೆಗೆ ಭೇಟಿ ನೀಡಿದ ಬಳಿಕ ಮಧ್ಯಾಹ್ನ ಪ್ರಜ್ವಲ್ ರೇವಣ್ಣ ಬಿಜೆಪಿಯ 13ನೇ ವಾರ್ಡ್ ನ ನಗರಸಭಾ ಸದಸ್ಯ ಮಂಜುರನ್ನ ಬಿಜೆಪಿಗೆ ಸೆಳೆದ್ರು. ನಗರಸಭಾ ಸದಸ್ಯ ಮಂಜುರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಚುನಾವಣೆ ಬಗ್ಗೆ ಚರ್ಚಿಸಿದ್ರು. ಹಾಸನದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಕೆಲವು ಬಿಜೆಪಿ ಮತ್ತು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಪಜ್ವಲ್ ರೇವಣ್ಣ ಹೇಳಿದ್ದಾರೆ. ಮಾಜಿ ಶಾಸಕ ದಿವಂಗತ ಹೆಚ್.ಎಸ್.ಪ್ರಕಾಶ್ ರ ಮನೆಗೆ ಭೇಟಿ ನೀಡಿ ಪ್ರಕಾಶ್ ರ ಪುತ್ರ ಸ್ವರೂಪ್ ಜೊತೆ ಚುನಾವಣೆ ಬಗ್ಗೆ ಚರ್ಚಿಸಿದ್ರು. ಬಳಿಕ ಮಾತನಾಡಿದ ಪ್ರಜ್ವಲ್ 22 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಯ ನಂತರ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ


ಹಾಸನ ಜಿಲ್ಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಯಾರು ಯಾವ ಪಕ್ಷ ಸೇರುತ್ತಾರೆ ಯಾರು ಯಾವ ಅಭ್ಯರ್ಥಿ ಪರ ಇದ್ದಾರೆ ಎಂಬುದು ಭಾರೀ ನಿಗೂಢವಾಗಿದೆ. ಒಂದು ಕಡೆ ಮಾಜಿ ಸಚಿವ ಎ.ಮಂಜು ಮತ್ತೊಂದು ಕಡೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮತದಾರ ಯಾವ ಅಭ್ಯರ್ಥಿಗೆ ಮಣೆ ಹಾಕುತ್ತಾನೆ ಎಂಬುದನ್ನು ಕಾದು ನೋಡಬೇಕಿದೆ.

Comments

Leave a Reply

Your email address will not be published. Required fields are marked *