ಸೋಮವಾರ ಎಚ್‍ಡಿಡಿ ತುಮಕೂರಿನಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮೊಮ್ಮಗನಿಗಾಗಿ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಸೋಮವಾರ  ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ತುಮಕೂರು ಲೋಕಸಭೆ ಕ್ಷೇತ್ರದಿಂದ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ದೇವೇಗೌಡರು ಕಣಕ್ಕೆ ಇಳಿಯುವುದು ಖಚಿತವಾಗಿದೆ. ಸೋಮವಾರ ಮಧ್ಯಾಹ್ನ 2 ರಿಂದ 3 ಗಂಟೆ ಅವಧಿಯಲ್ಲಿ ದೇವೇಗೌಡರು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ವೇಳೆ ಕಾಂಗ್ರೆಸ್ ನಾಯಕರೂ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಜೆಡಿಎಸ್ ವಕ್ತಾರರು ತಿಳಿಸಿದ್ದಾರೆ.

ಗೌಡರ ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಸಲಹೆ ಮೇರೆಗೆ ಸಮಯ ನಿಗದಿಯಾಗಿದ್ದು, ಇದೇ ಸಮಯಕ್ಕೆ ನಾಮಪತ್ರ ಸಲ್ಲಿಸುವಂತೆ ತಂದೆಗೆ ಸಚಿವ ರೇವಣ್ಣ ಅವರು ತಿಳಿಸಿದ್ದಾರೆ ಎನ್ನಲಾಗಿದೆ. ಜ್ಯೋತಿಷಿಗಳು ತಿಳಿಸಿದ ಮುಹೂರ್ತದಲ್ಲಿಯೇ ದೇವೇಗೌಡರು ನಾಮಪತ್ರ ಸಲ್ಲಿಸಲಿದ್ದು, ಇಂದು ಬೆಳಗ್ಗೆ ದೇವೇಗೌಡರನ್ನು ಭೇಟಿ ಮಾಡಿ ವೇಳೆ ರೇವಣ್ಣ ಅವರು ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಇತ್ತ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಕೂಡ ಸೋಮವಾರ ನಾಮಪತ್ರ ಸಲ್ಲಿಸಿದು ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ.

Comments

Leave a Reply

Your email address will not be published. Required fields are marked *