`ಕೈ’ ಹಿಡಿದ ಖೇಣಿ – ಕಾಂಗ್ರೆಸ್ಸಿಗೆ ಖೆಡ್ಡಾ ತೋಡಲು ದಾಳ ಉರುಳಿಸಿದ ದೇವೇಗೌಡ!

ಬೆಂಗಳೂರು: ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತನಾಡಿದ ಅವರು, ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಆಗಿರುವುದು ಶಾಕ್ ಆಗಿದೆ. ಮನಸ್ಸಿಗೆ ತುಂಬಾ ಬೇಸರವಾಗಿದೆ. ಖೇಣಿ ಸೆರ್ಪಡೆ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಚುನಾವಣೆ ಗೆಲ್ಲಲು ಕಾಂಗ್ರೆಸ್ ಏನೆಲ್ಲ ಅಸ್ತ್ರಗಳು ಬೇಕು ಅದನ್ನ ತಯಾರು ಮಾಡಿಕೊಳ್ಳುತ್ತಿದ್ದಾರೆ ಎಂದರು.

ನೈಸ್ ಅಕ್ರಮ ಸಾಬೀತಾಗಿರುವ ಬಗ್ಗೆ ಸದನ ಸಮಿತಿ ವರದಿ ಕೊಟ್ಟಿದೆ. ಸಿದ್ದರಾಮಯ್ಯ, ರಮೇಶ್ ಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರೇ ಸದನದಲ್ಲಿ ಖೇಣಿಯನ್ನು ವಿರೋಧಿಸಿದ್ದರು. ಇಂದು ಅವರನ್ನ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಜನರು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಾರೆ. ಅವರೇ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ರು.

ಈ ಬೆಳವಣಿಗೆ ಬಗ್ಗೆ ಬುಧವಾರ ನಮ್ಮ ಪಕ್ಷದ ಹಿರಿಯ ಮುಖಂಡರ ಸಭೆ ನಡೆಸುತ್ತೇನೆ. ಉಪ ಚುನಾವಣೆಯಲ್ಲಿ ಪರೋಕ್ಷ ಬೆಂಬಲ ನೀಡಿದ್ದೇವೆ, ಬಿಬಿಎಂಪಿಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಈ ಮೈತ್ರಿಗಳ ಬಗ್ಗೆ ಹಿರಿಯ ನಾಯಕರೊಂದಿಗೆ ಮಾತನಾಡಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳುವ ಮೂಲಕ ಬಿಬಿಎಂಪಿಯಲ್ಲಿ ಕಾಂಗ್ರೆಸ್‍ಗೆ ನೀಡಿರುವ ಬೆಂಬಲ ಹಿಂಪಡೆಯುವ ಬಗ್ಗೆ ಪರೋಕ್ಷವಾಗಿ ದೇವೇಗೌಡರು ಸೂಚನೆ ನೀಡಿದ್ರು.

Comments

Leave a Reply

Your email address will not be published. Required fields are marked *