ಶನಿವಾರ ಪೂರ್ಣಾವಧಿ ಕೆಲಸಕ್ಕೆ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಚನೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದು, ಎಲ್ಲಾ ಸಿಬ್ಬಂದಿ ಶನಿವಾರ ಪೂರ್ಣಾವಧಿ ಕೆಲಸ ಮಾಡಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಸೂಚನೆ ನೀಡಿದೆ.

ಪ್ರತಿಭಟನೆ ಏಕೆ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಮಸೂದೆಯನ್ನು ಜಾರಿಗೆ ತರದಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘವು ಬಂದ್‍ಗೆ ಕರೆ ನೀಡಿದೆ. ಬಂದ್ ನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ, ಉಳಿದ ಒಪಿಡಿ, ಪ್ರಯೋಗಾಲಯ ಸೇರಿದಂತೆ ವೈದ್ಯಕೀಯ ಸೇವೆ ಅಲಭ್ಯವಾಗಲಿದೆ.

ಏನಿದು ಎನ್‍ಎಂಸಿ ಮಸೂದೆ?: ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ‘ರಾಷ್ಟ್ರೀಯ ವೈದ್ಯಕೀಯ ಆಯೋಗ-2017’ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.

Comments

Leave a Reply

Your email address will not be published. Required fields are marked *