ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ- ಮಲ್ಲಿಕಾರ್ಜುನ ಖರ್ಗೆ

ತುಮಕೂರು: ನಡೆದಾಡುವ ದೇವರು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಶ್ರೀಗಳಿಗೆ ಉಸಿರಾಟದ ತೊಂದರೆಯಿದ್ದು ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸಂಪೂರ್ಣವಾಗಿ ಗುಣಮುಖರಾಗುವ ವಿಶ್ವಾಸ ಇದೆ ಎಂದರು.

ಪೂಜ್ಯರು ದೇಶಕ್ಕೆ ವಿಶೇಷ ನೀಡಿದ್ದಾರೆ. ಅವರಿಗೆ ಭಾರತ ರತ್ನ ಕೊಡುವಂತೆ ಪಕ್ಷಾತೀತವಾಗಿ ಒತ್ತಾಯ ಮಾಡಬೇಕು. ಈ ಸಂಬಂಧ ನಾನು ಕೂಡ ಕೇಂದ್ರಕ್ಕೆ ಪತ್ರ ಬರೆದು ಶ್ರೀಗಳಿಗೆ ಭಾರತ ರತ್ನ ನೀಡಿ ಗೌರವಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ವೈದ್ಯ ಡಾ.ಪರಮೇಶ್ ಅವರು ನಿನ್ನೆಯಷ್ಟೇ ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಕಂಡುಬರುತ್ತಿಲ್ಲ. ಮತ್ತೆ ಅವರ ಶ್ವಾಸಕೋಶದ ಎರಡೂ ಭಾಗದಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ದೇಹದಿಂದ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಸದ್ಯ ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಮಲಗಿದಲ್ಲಿಯೇ ಶ್ರೀಗಳು ಅವರ ಕೈಕಾಲುಗಳ ಚಲನವಲನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *