ಶಾಸಕರಿಗೆ ವಿಪ್ ನೀಡಬಹುದು – ಸ್ಪೀಕರ್ ರೂಲಿಂಗ್

ಬೆಂಗಳೂರು: ಶಾಸಕಾಂಗ ಪಕ್ಷದ ಅಧ್ಯಕ್ಷರಿಗೆ ವಿಪ್ ನೀಡುವ ಜವಾಬ್ದಾರಿ ಇದೆ ಎಂದು ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ನೀಡಿದ್ದಾರೆ.

ನಿಗದಿ ಪ್ರಕಾರ 11 ಗಂಟೆಗೆ ಕಲಾಪ ಆರಂಭಗೊಳ್ಳಬೇಕಿತ್ತು. ಈ ಮಧ್ಯೆ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ ನಿರ್ಧಾರವನ್ನು ತಿಳಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಚೇರಿಯಲ್ಲಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡರು ಚರ್ಚೆ ನಡೆಸಿದರು. ಹೀಗಾಗಿ ಒಂದು ಗಂಟೆ ತಡವಾಗಿ ಕಲಾಪ ಆರಂಭಗೊಂಡಿತು.

ಆರಂಭದಲ್ಲೇ ಸದನಸ ಸದಸ್ಯರ ಜೊತೆ ಕ್ಷಮೆ ಕೇಳಿದ ಸ್ಪೀಕರ್ ಮೊನ್ನೆ ಸಿದ್ದರಾಮಯ್ಯ ಎತ್ತಿದ್ದ ಕ್ರಿಯಾ ಲೋಪದ ಬಗ್ಗೆ ರೂಲಿಂಗ್ ನೀಡುತ್ತೇನೆ ಎಂದು ಹೇಳಿದರು.  ಇದನ್ನೂ ಓದಿ – ದೋಸ್ತಿಗಳಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ವಿಪ್ ನೀಡಬಹುದೋ ಇಲ್ಲವೋ ಎನ್ನುವುದರ ಬಗ್ಗೆ ಸಿದ್ದರಾಮಯ್ಯ ಕ್ರಿಯಾ ಲೋಪ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು. ಅದು ಸಂವಿಧಾನದತ್ತವಾದ ಹಕ್ಕು. ಈ ವಿಚಾರದ ಬಗ್ಗೆ ನಾನು ಕಾನೂನು ಪಂಡಿತರ ಜೊತೆ ಚರ್ಚೆ ನಡೆಸಿದ್ದೇನೆ. ಇದನ್ನು ನಾನು ಅಧಿಕಾರ ಎಂದು ಕರೆಯುವುದಿಲ್ಲ. ಇದನ್ನು ಜವಾಬ್ದಾರಿ ಎಂದು ಕರೆಯುತ್ತೇನೆ. ಹೀಗಾಗಿ ಶಾಸಕಾಂಗ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪೀಕರ್ ರೂಲಿಂಗ್ ನೀಡಿದರು.

ಈ ವೇಳೆ ಜಗದೀಶ್ ಶೆಟ್ಟರ್ ಮತ್ತು ಮಾಧುಸ್ವಾಮಿ ಅವರು ಇಂದೇ ವಿಶ್ವಾಸ ಮತಯಾಚನೆ ನಡೆಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಈಗಾಗಲೇ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತಿದೆ. ಹೀಗಾಗಿ ಯಾವುದೇ ಕಾಲಹರಣ ನಡೆಸದೇ ಚರ್ಚೆ ಮಾತ್ರ ನಡೆಸಿ ಈ ಪ್ರಕ್ರಿಯೆ ಮುಗಿಸಿಕೊಡಲಾಗುವುದು ಎಂದು ತಿಳಿಸಿದರು.

ವಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಸ್ಪಷ್ಟನೆ ನೀಡುವಂತೆ ಕೋರಿದ್ದಾರೆ. ಜುಲೈ 17ರಂದು ಅತೃಪ್ತರ ಬಗ್ಗೆ ನೀಡಿರುವ ಮಧ್ಯಂತರ ಆದೇಶದಿಂದ ಗೊಂದಲ ಸೃಷ್ಟಿಯಾಗಿದೆ. ಕಲಾಪಕ್ಕೆ ಹಾಜರಾಗಬೇಕೇ? ಬೇಡವೇ ಎನ್ನುವುದನ್ನು ಶಾಸಕರ ವಿವೇಚನೆಗೆ ಬಿಡಲಾಗಿದೆ. ಈ ಆದೇಶ ರಾಜಕೀಯ ಪಕ್ಷಗಳ ವಿಪ್ ಅಧಿಕಾರವನ್ನು ಕಿತ್ತುಕೊಳ್ಳಲಿದೆ. ಶೆಡ್ಯೂಲ್ 102(1)ಬಿ ಅನ್ವಯ ರಾಜಕೀಯ ಪಕ್ಷಗಳಿಗೆ ವಿಪ್ ಅಧಿಕಾರವಿದೆ. ವಿಶ್ವಾಸಮತ ಸಾಬೀತು ವೇಳೆ ಶಾಸಕರಿಗೆ ವಿಪ್ ನೀಡುವುದು ಅನಿವಾರ್ಯವಾಗಿದೆ. ನೀವು ನೀಡಿರುವ ಆದೇಶ ಈ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *