ಸಚಿವ ಅನಂತ್‍ಕುಮಾರ್ ಹೆಗ್ಡೆ ಆಪ್ತರ ಮನೆ ಮೇಲೆ ಐಟಿ ರೇಡ್

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಹಾಗೂ ಬಿಜೆಪಿ ಕೆನರಾ ಕ್ಷೇತ್ರದ ಅಭ್ಯರ್ಥಿ ಅನಂತ್‍ಕುಮಾರ್ ಹೆಗ್ಡೆ ಅವರ ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ಹಾಗೂ ಚುನಾವಣಾ ವೀಕ್ಷಣಾ ದಳ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಶಿರಸಿ ನಗರದ ಚಿಪಗಿ ಬಡಾವಣೆಯಲ್ಲಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ ಹೆಗಡೆ ಮನೆಯ ಮೇಲೆ ಐಟಿ ಅಧಿಕಾರಿಗಳು ಹಾಗೂ ಚುನಾವಣಾ ವೀಕ್ಷಣಾ ದಳ ದಾಳಿ ನಡೆಸಿದೆ. ಈ ವೇಳೆ 4 ಕಾರು ಮತ್ತು ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೋವಾ ಹಾಗೂ ಹುಬ್ಬಳ್ಳಿಯಿಂದ ಆಗಮಿಸಿದ್ದ ಐದಕ್ಕೂ ಹೆಚ್ಚು ಮಂದಿ ಐಟಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡುತಿದ್ದ ಮಹೀಂದ್ರ, ಇನ್ನೋವಾ, ಸ್ವಿಫ್ಟ್ ಹಾಗೂ ಸಫಾರಿ ಕಾರುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಮನೆಯಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಎಸಳೆ ಅವರ ವಿವೇಕಾನಂದ ನಗರದ ಕೆಎಚ್‍ಬಿ ಕಾಲೋನಿಯಲ್ಲಿರುವ ಮನೆಯ ಮೇಲೆ ಕೂಡ ಐಟಿ ದಾಳಿ ನಡೆದಿದೆ.

ಶಿರಸಿಯಲ್ಲಿ ಕಳೆದ ಎರಡು ದಿನದ ಹಿಂದೆ ಜೆಡಿಎಸ್ ಅಭ್ಯರ್ಥಿ ಆನಂದ್ ಆಸ್ನೋಟಿಕರ್ ಬೆಂಬಲಿಗರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ ಅಪಾರ ಪ್ರಮಾಣದ ಹಣ ದೊರೆತಿದೆ.

Comments

Leave a Reply

Your email address will not be published. Required fields are marked *