ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ.

ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ ಜಯಂತ್ ಕಾಯ್ಕಿಣಿ ಸಹ ಗೀತೆ ರಚಿಸುವ ಮೂಲಕ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಗೀತೆಯನ್ನು ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

ಜಯಂತ್ ಕಾಯ್ಕಿಣಿಯವರು ಕೇವಲ ಸಾಹಿತ್ಯ, ಸಿನಿಮಾ ಗೀತೆ ರಚಿಸುವುದು ಮಾತ್ರವಲ್ಲ, ಸಮಾಜದ ಆಗುಹೋಗಗಳ ಕುರಿತು ಸಹ ಆಗಾಗ ಪ್ರತಿಕ್ರಿಯಸುತ್ತಿರುತಾರೆ. ಹಲವು ಸಂದರ್ಭಗಳಲ್ಲಿ ವಿವಿಧ ಸಲಹೆಗಳನ್ನು ಸಹ ನೀಡುತ್ತಾರೆ. ಇನ್ನೂ ಹಲವು ಬಾರಿ ಅವರ ಗೀತೆಗಳ ಮೂಲಕವೇ ಜನರಲ್ಲಿ ಅರಿವು ಮೂಡಿಸುತ್ತಾರೆ. ಅದರಂತೆ ಇದೀಗ ಕೊರೊನಾ ಬಗ್ಗೆ ಜಾಗೃತಿ ಗೀತೆಯನ್ನು ರಚಿಸಿ, ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಂದ ಹಾಡಿಸಿದ್ದಾರೆ. ಹೀಗಾಗಿ ಈ ಹಾಡಿಗೆ ಮಹತ್ವ ಇನ್ನೂ ಹೆಚ್ಚಾಗಿದೆ.

ಸಾಮಾಜಿಕ ಜಾಲತಾಣ ಫೆಸ್ಬುಕ್‍ನಲ್ಲಿ ಹಲವರು ಈ ಕುರಿತು ಕಮೆಂಟ್ ಮಾಡಿದ್ದು, ತುಂಬಾ ಚೆನ್ನಾಗಿ ಹಾಡಿದ್ದೀರಿ ಸರ್, ಜಯಂತ್ ಕಾಯ್ಕಿಣಿಯವರು ಅರ್ಥಗರ್ಭಿತವಾಗಿ ಸಾಹಿತ್ಯ ಬರೆದಿದ್ದಾರೆ. ನೀವೂ ಅದಕ್ಕೆ ನ್ಯಾಯ ಒದಗಿಸಿದ್ದೀರಿ. ಕೇಳಲು ತುಂಬಾ ಚೆನ್ನಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತೊಬ್ಬರು ಕಮೆಂಟ್ ಮಾಡಿ ಜಯಂತ್ ಕಾಯ್ಕಿಣಿಯವರು ತುಂಬಾ ಚೆನ್ನಾಗಿ ಹಾಡು ಬರೆದಿದ್ದಾರೆ. ನೀವು ಸಹ ಅಚ್ಚುಕಟ್ಟಾಗಿ ಹಾಡಿದ್ದೀರಿ. ನೀವು ಹಾಡಿದ ಪವನಿಸು ಪರಮಾತ್ಮ ಶ್ರೀ ವೆಂಕಟೇಶ ನನ್ನ ನೆಚ್ಚಿನ ಗೀತೆ ಎಂದಿದ್ದಾರೆ.

ಇನ್ನೊಬ್ಬರು ಕಮೆಂಟ್ ಮಾಡಿ, ಅರ್ಥಗರ್ಭಿತ ಸಾಹಿತ್ಯ, ನೀವೂ ತುಂಬಾ ಚೆನ್ನಾಗಿ ಹಾಡಿದ್ದೀರಿ. ಒಳ್ಳೆಯ ಸಂದೇಶವಿದೆ. ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಎಸ್‍ಪಿಬಿ ಸರ್ ಎಂದು ಕಮೆಂಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *