ತವರೂರಿನಲ್ಲಿ ಸಿಎಂಗೆ ಶಾಕ್ – ಜೆಡಿಎಸ್ ಜಿಲ್ಲಾಧ್ಯಕ್ಷ ರಾಜೀನಾಮೆ

ರಾಮನಗರ: ಒಂದೆಡೆ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಶಾಸಕರ ರಾಜೀನಾಮೆ ಶುರುವಾಗಿದ್ರೆ, ಇತ್ತ ಸಿಎಂಗೆ ತಮ್ಮ ತವರು ರಾಮನಗರ ಜಿಲ್ಲೆಯಲ್ಲಿ ಶಾಕ್ ಎದುರಾಗಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಪಿ ಅಶೋಕ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಪಿ ಅಶೋಕ್ ಕುಮಾರ್ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆಯನ್ನು ಶಾಸಕಿ ಅನಿತಾ ಅವರಿಗೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ರೂ ಕೂಡ ಪಕ್ಷದಲ್ಲಿ ಕಡಗಣನೆ ಮಾಡಿದ್ದೇ ಅಶೋಕ್ ರಾಜೀನಾಮೆಗೆ ಕಾರಣವಾಗಿದೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಅಶೋಕ್ ಕುಮಾರ್ ಪಕ್ಷದ ಸಂಘಟನೆ ಹಾಗೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಆದರೆ ಸಿಎಂ ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ರಾಮನಗರಕ್ಕೆ ರಾಜೀನಾಮೆ ನೀಡಿದ ಬಳಿಕ ಅಶೋಕ್ ಕುಮಾರ್ ಸರಿಯಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಂಡಿರಲಿಲ್ಲ.

ಅನಿತಾ ಅವರು ಶಾಸಕಿಯಾಗಿ ಆಯ್ಕೆಯಾದ ಬಳಿಕ ತಮ್ಮನ್ನು ಸಾಕಷ್ಟು ಕಡೆಗಣಿಸಿದ್ದಾರೆ. ಅನಿತಾ ಅವರು ತಮ್ಮ ಬೆಂಬಲಿಗರಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಅಶೋಕ್‍ರ ನಡುವೆ ಅಂತರ ಕಾಯ್ದುಕೊಂಡಿದ್ದರು. ಯಾವುದಕ್ಕೂ ಕೂಡ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ಮನನೊಂದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಶೋಕ್ ಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *