ಮದ್ದೂರು ನಗರದಲ್ಲಿ ಕತ್ತು ಕೊಯ್ದು ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

ಮಂಡ್ಯ: ಮಾಜಿ ಪಂಚಾಯತ್ ಅಧ್ಯಕ್ಷೆಯ ಪತಿ ಹಾಗೂ ಜೆಡಿಎಸ್ ಮುಖಂಡರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರಿನ ಟಿಬಿ ಸರ್ಕಲ್ ಬಳಿ ನಡೆದಿದೆ.

ಹೊನ್ನಲಗೆರೆ ಪ್ರಕಾಶ್ (50) ಕೊಲೆಯಾದ ದುರ್ದೈವಿ. ಸೋಮವಾರ ಮಧ್ಯಾಹ್ನ ಮದ್ದೂರು ಪಟ್ಟಣದ ಟಿಬಿ ಸರ್ಕಲ್ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ಕುಳಿತಿದ್ದ ಪ್ರಕಾಶ್‍ರನ್ನು ಕತ್ತು ಸೀಳಿ ಪರಾರಿಯಾಗಿದ್ದಾರೆ. ತೀವ್ರವಾಗಿ ಮಾರಕಾಸ್ತ್ರಗಳಿಂದ ದಾಳಿಗೊಳಗಾಗಿದ್ದ ಕಾರಿನಲ್ಲೇ ಮೃತಪಟ್ಟಿದ್ದಾರೆ.

ಪ್ರಕಾಶ್ ಹತ್ಯೆಯಾದ ಸುದ್ದಿ ಹಬ್ಬುತ್ತಲೇ, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಬೆಂಗಳೂರು, ಮೈಸೂರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಹತ್ಯೆ ಖಂಡಿಸಿ ಮಂಡ್ಯ ಸಂಸದ ಶಿವರಾಮೇಗೌಡರೂ ಸಹ ರಸ್ತೆಯಲ್ಲೇ ಕುಳಿತು, ಪ್ರತಿಭಟನೆ ನಡೆಸಿದ್ದಾರೆ. ಇದರ ಪರಿಣಾಮ ಕಿಲೋಮೀಟರ್ ಗಟ್ಟಲೇ ಬೆಂಗಳೂರು ಮೈಸೂರು ಹೆದ್ದಾರಿ ಮಾರ್ಗ ಬಂದ್ ಆಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸವಾರರನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ.

ಹತ್ಯೆಗೆ ಹಳೆ ದ್ವೇಷದ ಶಂಕೆ ವ್ಯಕ್ತವಾಗುತ್ತಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *