8 ಕ್ಷೇತ್ರಗಳಲ್ಲಿ ಆಭ್ಯರ್ಥಿ ಹಾಕ್ತೀವಿ – ಕಾಂಗ್ರೆಸ್‍ಗೆ ಸ್ಪಷ್ಟ ಸಂದೇಶ ರವಾನಿಸಿದ ಎಚ್‍ಡಿಡಿ

– ತುಮಕೂರು ಬಿಟ್ಟುಕೊಡಿ ಎಂದ ‘ಕೈ’ ನಾಯಕರಿಗೆ ಠಕ್ಕರ್

ಬೆಂಗಳೂರು: ಮೈತ್ರಿ ಸರ್ಕಾರದ ಡಿಸಿಎಂ ಆಗಿರುವ ಪರಮೇಶ್ವರ್ ಅವರ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಬೇಕು ಎಂಬ ಹೇಳಿಕೆಗಳ ಬೆನ್ನಲ್ಲೇ ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಪದ್ಮನಾಭನಗರದ ಎಚ್‍ಡಿಡಿ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ 20 ಜೆಡಿಎಸ್ ಗೆ 8 ಕ್ಷೇತ್ರ ಹಂಚಿಕೆಯಾಗಿದೆ. ತುಮಕೂರು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಸೇರಿದಂತೆ ಎಲ್ಲಾ ಕಡೆ ಅಭ್ಯರ್ಥಿ ಹಾಕುತ್ತೇವೆ. ಎಲ್ಲಾ 28 ಕ್ಷೇತ್ರಗಳಲ್ಲೂ ನಾನು ಪ್ರಚಾರ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ತುಮಕೂರು ಕ್ಷೇತ್ರವನ್ನು ಬಿಟ್ಟು ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆಯಾಗಿರುವ 28 ಕ್ಷೇತ್ರದಲ್ಲೂ ಪ್ರಚಾರ ಮಾಡುತ್ತೇನೆ. ಟಿಕೆಟ್ ಯಾರಿಗೆ ನೀಡುತ್ತೇವೆ ಎಂಬುದಕ್ಕೆ ಸ್ವಲ್ಪ ಕಾಯಿರಿ. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಡ್ಯಾನಿಶ್ ಅಲಿ ಬಿಎಸ್‍ಪಿ ಸೇರಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರಿಗೆ ಒಳ್ಳೆಯದಾಗಲಿ ಎಂದು ನಾನೇ ಹೇಳಿ ಕಳಿಸಿದ್ದೇನೆ ಎಂದರು.

ತುಮಕೂರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚರ್ಚೆ ನಡೆಸುತ್ತಿರುವ ವೇಳೆಯಲ್ಲೇ ದೇವೇಗೌಡರು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ.

Comments

Leave a Reply

Your email address will not be published. Required fields are marked *