ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ.

ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು ಪ್ರಶ್ನಿಸತೊಡಗಿದರು.

ಸಾರ್ವಜನಿಕರ ಟೀಕೆಯಿಂದ ಎಚ್ಚೆತ್ತ ಮುಖ್ಯಮಂತ್ರಿಗಳು ಬಿ.ಶರತ್ ಅವರ ವರ್ಗಾವಣೆಯನ್ನು ತಡೆ ಹಿಡಿದಿದ್ದಾರೆ. ದೂರವಾಣಿ ಬಿ.ಶರತ್ ಜೊತೆ ಮಾತನಾಡಿರುವ ಮುಖ್ಯಮಂತ್ರಿಗಳು, ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ, ಮುಂದುವರಿಸಿ. ಸದ್ಯ ನಿಮ್ಮನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ವರ್ಗಾವಣೆಯ ಆದೇಶ ಹೊರ ಬೀಳುತ್ತಿದ್ದಂತೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಹ ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.

Comments

Leave a Reply

Your email address will not be published. Required fields are marked *