ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

– ಸೂರಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಮಹತ್ವದ ತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿವೆ. ಈ ಸಂಬಂಧ ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದು, ಈ ಬೆನ್ನಲ್ಲೇ ಗೋವಾದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

ಮಾಂಡೋವಿ ಬಚಾವೋ ಆಂದೋಲನದ ಕಾರ್ಯಕರ್ತರು ಕರ್ನಾಟಕ- ಗೋವಾ ಗಡಿಭಾಗದ ಸೂರಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮಹದಾಯಿ ತೀರ್ಪು ಸ್ವಲ್ಪ ಕರ್ನಾಟಕದ ಪರ ಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ರೈತರು ಸಂಭ್ರಮಿಸಿದ್ದಾರೆ.

ನ್ಯಾಯಾಧಿಕರಣದ ಐತೀರ್ಪಿನಲ್ಲಿ ಒಟ್ಟು 13.05 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರಿನಲ್ಲಿ, 5.5 ಟಿಎಂಸಿ ನೀರು ಕುಡಿಯುವ ಬಳಕೆಗೆ ಸಿಕ್ಕಿದರೆ, 8 ಟಿಎಂಸಿ ನೀರು ನೀರಾವರಿಗೆ ಸಿಕ್ಕಿದೆ. ಈ ಸಂಬಂಧ ಪಬ್ಲಿಕ್ ಟಿವಿಗೆ ರಾಜ್ಯದ ವಕೀಲ ಮೋಹನ್ ಕಾತರಕಿ ಪ್ರತಿಕ್ರಿಯಿಸಿ, ನನಗೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರು ಸಿಕ್ಕಿದೆ. ಪೂರ್ಣವಾಗಿ ನಾನು ತೀರ್ಪು ಓದಿಲ್ಲ. ಈ ತೀರ್ಪು ಸ್ವಲ್ಪ ಸಮಧಾನ, ಸ್ವಲ್ಪ ಬೇಸರ ತಂದಿದೆ ಎಂದು ಹೇಳಿದರು.

ಕರ್ನಾಟಕಕ ಪರ ವಾದ ಏನಾಗಿತ್ತು?
ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು.

ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *