ಹವಾಮಾನ ಇಲಾಖೆಯಿಂದ ಆರು ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್

– ಸಿಡಿಲು ಬಡಿದು ರೈತ ಸಾವು

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆಯು ರಾಜ್ಯದ 6 ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಿದೆ.

ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸುಂದರ್ ಎಂ ಮೈತ್ರಿ, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆ ಭಾರೀ ಮಳೆಯಾಗಲಿದೆ. ಕರಾವಳಿ ಪ್ರದೇಶಗಳಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ವರುಣ ಅಬ್ಬರಿಸುವ ಸಾಧ್ಯತೆಗಳಿದೆ. ಕೆಲವು ಭಾಗಗಳಲ್ಲಿ 7ರಿಂದ 11 ಸೆಂಟಿಮೀಟರ್ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಸಂಜೆ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸುಂದರ್ ಎಂ ಮೈತ್ರಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ಘಟನೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಶಿವಾನಂದಪ್ಪ ಹರಿಜನ (45) ಮೃತ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಿವಮೊಗ್ಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಮಳೆಯಿಂದಾಗಿ ರಸ್ತೆಯ ಮೇಲೆ ನೀರು ನಿಂತಿದ್ದು, ಸವಾರರು ಪರದಾಡುವಂತಾಗಿದೆ.

Comments

Leave a Reply

Your email address will not be published. Required fields are marked *