ಇನ್ನೂ 5 ದಿನ ಮಳೆ- ಕೊಡಗು, ಚಿಕ್ಕಮಗಳೂರು ಶಾಲೆಗೆ ರಜೆ

ಮಡಿಕೇರಿ/ಚಿಕ್ಕಮಗಳೂರು: ಕೊಡಗಿನಲ್ಲಿ ಮುಂದಿನ ಐದು ದಿನ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಡಿಕೇರಿಯ ಜನ ಮತ್ತೆ ಮಳೆ ಹಾಗೂ ಭೂಕುಸಿತದ ಆತಂಕದಲ್ಲಿದ್ದಾರೆ.

ಇತ್ತ ಚಿಕ್ಕಮಗಳೂರಿನ 5 ತಾಲೂಕಿನ ಶಾಲಾ-ಕಾಲೇಜಿಗೂ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆಯಲ್ಲಿ ರಜೆ ಘೋಷಿಸಲಾಗಿದೆ. ಚಾಮರಾಜನಗರ ನೆರೆಪೀಡಿತ ಪ್ರದೇಶಗಳ ಶಾಲಾ ಮಕ್ಕಳಿಗೂ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಅಬ್ಬರ ತಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತಾ ಬರುತ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲೂಕಿನ 30, ವಿರಾಜಪೇಟೆ ತಾಲೂಕಿನಲ್ಲಿ 32, ಸೋಮವಾರಪೇಟೆ ತಾಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗರುತಿಸಲಾಗಿದೆ.

Comments

Leave a Reply

Your email address will not be published. Required fields are marked *