ತಡರಾತ್ರಿಯಲ್ಲಿ ವಿದ್ಯಾರ್ಥಿನಿಗಾಗಿ ನಿಲ್ದಾಣದಲ್ಲಿ ಕಾದು ಕುಳಿತ ಬಸ್ ಡ್ರೈವರ್, ಕಂಡಕ್ಟರ್

ತಿರುವನಂತಪುರಂ: ತಡರಾತ್ರಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಸುರಕ್ಷತೆಗಾಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಕೊಂಡು ಕಾದು ಕುಳಿತ ಬಸ್ ಕಂಡಕ್ಟರ್ ಮತ್ತು ಡ್ರೈವರ್‍ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿಗೆ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಮನೆ ಮಾಡಿದೆ. ಇದರ ಬೆನ್ನಲ್ಲೇ ಕೇರಳ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ ಕಂಡಕ್ಟರ್ ಪಿ.ಶಜುದ್ದೀನ್ ಮತ್ತು ಡ್ರೈವರ್ ಡೆನ್ನಿಸ್ ಕ್ಸೇವಿಯರ್ ಓರ್ವ ವಿದ್ಯಾರ್ಥಿನಿಗೆ ಮಾಡಿರುವ ಸಹಾಯಕ್ಕೆ ಎಲ್ಲರೂ ಮೆಚ್ಚಿಕೊಂಡಾಡಿದ್ದಾರೆ.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಂಫಿಲ್ ಓದುತ್ತಿರುವ ಕೇರಳದ ಕಣ್ಣೂರಿನ ವಿದ್ಯಾರ್ಥಿ ಎಲ್ಸಿನಾ ತನ್ನ ಸಂಶೋಧನೆ ಕೆಲಸದ ನಿಮಿತ್ತ ಕಳೆದ ಮಂಗಳವಾರ ಸರ್ಕಾರಿ ಬಸ್ ನಲ್ಲಿ ಕೊಟ್ಟಾಯಂ ಜಿಲ್ಲೆಯ ಪೊಡಿಮಟ್ಟಂಗೆ ತೆರಳಿದ್ದಾಳೆ. ಈ ವೇಳೆ ಅವಳು ಪೊಡಿಮಟ್ಟಂ ಹತ್ತಿರದ ಕಂಜರಪಲ್ಲಿ ಬಸ್ ನಿಲ್ದಾಣಕ್ಕೆ ಬರುವುದರೊಳಗೆ ರಾತ್ರಿ 11 ಗಂಟೆಯಾಗಿದೆ. ಆ ದಿನ ಅಂದು ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದರಿಂದ ನಿಲ್ದಾಣದ ಬಳಿಯಿದ್ದ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.

ಈ ವೇಳೆ ಅಲ್ಲಿ ಎಲ್ಸಿನಾ ಒಬ್ಬಳೇ ಆ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಜನರೇ ಇಲ್ಲದ ಸ್ಥಳದಲ್ಲಿ ಒಬ್ಬಳೇ ಹೆಣ್ಣುಮಗಳನ್ನು ಕೆಳಗಿಳಿಸಬಾರದು ಎಂದು ಡ್ರೈವರ್ ಮತ್ತು ಕಂಡಕ್ಟರ್ ಅದೇ ನಿಲ್ದಾಣದಲ್ಲಿ ಬಸ್ ಸಿಲ್ಲಿಸಿಕೊಂಡು ಎಲ್ಸಿನಾಳನ್ನು ಕರೆದುಕೊಂಡು ಹೋಗಲು ಅವಳ ಸಂಬಂಧಿ ಬರುವವರೆಗೂ ಕಾಯ್ದಿದ್ದಾರೆ. ಇದಕ್ಕೆ ಬಸ್‍ನಲ್ಲಿ ಇದ್ದ ಸಹ ಪ್ರಯಾಣಿಕರು ಸಹ ಸಾಥ್ ನೀಡಿದ್ದಾರೆ. ಕೆಲ ಸಮಯದ ನಂತರ ಎಲ್ಸಿನಾ ಸಂಬಂಧಿಯೊಬ್ಬರು ಸ್ಥಳಕ್ಕೆ ಬಂದು ಅವಳನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಬಸ್ ಕಂಡಕ್ಟರ್ ಪಿ.ಶಜುದ್ದೀನ್ ಮತ್ತು ಡೆನ್ನಿಸ್ ಕ್ಸೇವಿಯರ್ ಅವರು ರಾತ್ರಿ ವೇಳೆ ವಿದ್ಯಾರ್ಥಿನಿಯ ಭದ್ರತೆಯ ಬಗ್ಗೆ ತೋರಿದ ಕಾಳಜಿಗೆ ಮತ್ತು ಸಹ ಪ್ರಯಾಣಿಕರ ತಾಳ್ಮೆಗೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಕೊಟ್ಟಾಯಂ ಜಿಲ್ಲೆಯ ಪುಂಜಾರ್ ತಾಲೂಕಿನ ಶಾಸಕರಾದ ಪಿ.ಸಿ. ಜಾರ್ಜ್ ಅವರು ಶಜುದ್ದೀನ್ ಮತ್ತು ಕ್ಸೇವಿಯರ್ ಅವರನ್ನು ಅಭಿನಂದಿಸಿದ್ದಾರೆ.

Comments

Leave a Reply

Your email address will not be published. Required fields are marked *