ಬಿಜೆಪಿ ನಾಯಕರಿಂದ ಕುಂದಗೋಳ ಕಾಂಗ್ರೆಸ್ ಕಚೇರಿ ಎತ್ತಂಗಡಿ

– ಕಚೇರಿ ಇಲ್ಲದೇ ‘ಕೈ’ ನಾಯಕರು ಕಂಗಾಲು

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಬಿಗ್ ಫೈಟ್ ಏರ್ಪಟ್ಟಿದೆ. ಪ್ರಚಾರದ ಕಾವು ಏರುತ್ತಿರುವಾಗಲೇ ಕುಂದಗೋಳ ಪಟ್ಟಣದ ಹೊರವಲಯದಲ್ಲಿದ್ದ ಕಾಂಗ್ರೆಸ್ ಕಚೇರಿಯನ್ನು ಬಿಜೆಪಿ ನಾಯಕರು ಎತ್ತಂಗಡಿ ಮಾಡಿಸಿದ್ದಾರೆ.

ಕುಂದಗೋಳದ ಮರಾಠಾ ಸಮುದಾಯ ಭವನದಲ್ಲಿ ಕಾಂಗ್ರೆಸ್ ಕಚೇರಿ ಮಾಡಲಾಗಿತ್ತು. ಈ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡವನ್ನು ಕಾಂಗ್ರೆಸ್ ನಾಯಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಬಿಜೆಪಿ ದೂರು ನೀಡಿದ್ದರಿಂದ ಚುನಾವಣಾ ಆಯೋಗವು ಕಾಂಗ್ರೆಸ್ ಕಚೇರಿಯನ್ನು ಜಪ್ತಿ ಮಾಡಿದೆ. ಇದರಿಂದಾಗಿ ಪಕ್ಷದ ಕಚೇರಿ ಇಲ್ಲದೇ ಕಾಂಗ್ರೆಸ್ ನಾಯಕರು ಕಂಗಾಲಾಗಿದ್ದಾರೆ. ಸದ್ಯ ಸ್ಥಳೀಯ ಮುಖಂಡರ ಮನೆಯನ್ನೇ ಕಾಂಗ್ರೆಸ್ ಕಚೇರಿ ಮಾಡಿಕೊಂಡಿದ್ದಾರೆ.

ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮೇ 19ರಂದು ನಡೆಯಲಿದ್ದು, ಫಲಿತಾಂಶವು ಮೇ 23ರಂದು ಹೊರ ಬೀಳಲಿದೆ. ಎರಡೂ ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಭರ್ಜರಿ ಮತ ಬೇಟೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *