ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು- ರೈತರು ಕಂಗಾಲು

ಚಾಮರಾಜನಗರ: ಕೆರೆ ಏರಿ ಒಡೆದು ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.

ಬೇಗೂರು ಹೋಬಳಿ ವ್ಯಾಪ್ತಿಗೆ ಸೇರಿದ ಈ ಬೆಳಚಲವಾಡಿ ಕೆರೆಯು 65 ಎಕರೆ ವಿಸ್ತೀರ್ಣ ಹೊಂದಿದ್ದು, ನೀರಿನ ಒತ್ತಡ ಹೆಚ್ಚಾಗಿ ಕೆರೆ ಏರಿ ಒಡೆದಿದೆ. ಶನಿವಾರ ಮಧ್ಯಾಹ್ನ ಕೆರೆ ಏರಿ ಸೋರುತ್ತಿರುವ ಕುರಿತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಈಗ ಏರಿಯೇ ಇಬ್ಭಾಗವಾಗಿ ಜಮೀನುಗಳಿಗೆ ನೀರು ನುಗ್ಗುತ್ತಿದ್ದು, ಬೆಳೆ ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾ.ಪಂ.ಸದಸ್ಯ ಮಹಾದೇವಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು

ರೈತರೊಬ್ಬರು ಕಳೆದ ಕೆಲವು ದಿನಗಳ ಹಿಂದೆ ಕೆರೆ ಮಧ್ಯೆ ಅಕ್ರಮವಾಗಿ ಕಟ್ಟೆ ಕಟ್ಟಿದ್ದರಿಂದ ನೀರಿನ ಒತ್ತಡ ಹೆಚ್ಚಾಗಿ ಈ ಅವಘಡ ಸಂಭವಿಸಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಳೆದ ಮೂರು ವರ್ಷಗಳಿಂದ ಗಾಂಧಿ ಗ್ರಾಮ ಯೋಜನೆಯ ಮೂಲಕ ಕೆರೆಗೆ ನೀರು ತುಂಬಿಸಲಾಗುತ್ತಿದ್ದು, ಈ ಕೆರೆ ತುಂಬಿದ ಬಳಿಕ ಕಮ್ಮರಹಳ್ಳಿ ಕೆರೆಗೆ ನೀರು ಹರಿಯುತ್ತಿತ್ತು.

ಕೆರೆ ಏರಿ ಒಡೆದಿರುವುದರಿಂದ ಗ್ರಾಮಸ್ಥರು ಆತಂಕಕ್ಕೆಗೊಳಗಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಕೆರೆ ಏರಿ ಒಡೆದಿದ್ದರಿಂದ ಅಪಾರ ಪ್ರಮಾಣದ ನೀರು ಹೆಡಿಯಾಲ ಬೇಗೂರು ಮುಖ್ಯ ರಸ್ತೆಗೆ ನೀರು ನುಗ್ಗಿ ಸಂಚಾರ ವ್ಯತ್ಯಯವಾಗಿತ್ತು.

Comments

Leave a Reply

Your email address will not be published. Required fields are marked *