ಕಾರ್ಕಳ ಅತ್ಯಾಚಾರ ಕೇಸ್‌; ಇದೊಂದು ಹೇಯಕೃತ್ಯ, ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ನೆರವು – ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ (Karkala Kidnap) ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಅಲ್ಲದೇ ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ.

ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ (Udupi Police) ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಲ್ತಾಫ್‌ನನ್ನು ಮುಸ್ಲಿಂ ಸಮುದಾಯದಿಂದ ಬಹಿಷ್ಕರಿಸಲು ತೀರ್ಮಾನ: ಮುಸ್ಲಿಂ ಮುಖಂಡ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಹಿಂಜರಿಕೆಯಿಲ್ಲ. ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಸಹ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: Karkala | ಕಿಡ್ನಾಪ್‌ಗೈದು ಮದ್ಯದಲ್ಲಿ ಅಮಲು ಪದಾರ್ಥ ಸೇರಿಸಿ ರೇಪ್‌ – ಉಡುಪಿ ಎಸ್‌ಪಿ ಹೇಳಿದ್ದೇನು?

ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಕಳ ಅತ್ಯಾಚಾರ ಪ್ರಕರಣ- ಆರೋಪಿಗಳು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ