ಹುತಾತ್ಮ ಯೋಧನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಲು ಒತ್ತಾಯ!

ಮಂಡ್ಯ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರಯೋಧ ಗುರು ಪತ್ನಿ ಕಲಾವತಿ ಅವರನ್ನ ಮಂಡ್ಯ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಮಾಡಲು ರಾಜ್ಯದ ಮೂರು ಪಕ್ಷಗಳ ಅಧ್ಯಕ್ಷರಿಗೆ ಪತ್ರ ಬರೆದು ಒತ್ತಾಯಿಸಲಾಗುತ್ತಿದೆ.

ಹೌದು, ಬೆಂಗಳೂರು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅವರು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ಪಕ್ಷಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಕಾಲೋನಿಯ ಹುತಾತ್ಮ ಯೋಧ ಗುರು ನಿವಾಸದಲ್ಲಿ ಪತ್ರ ಬಿಡುಗಡೆ ಮಾಡಿದ ವೆಂಕಟೇಶ್ ಅವರು ಕಲಾವತಿಯವರನ್ನು ಚುನಾವಣಾ ಅಭ್ಯರ್ಥಿಯನ್ನಾಗಿ ಮಂಡ್ಯದಿಂದ ಸ್ಪರ್ಧಿಸಲು ಅವಕಾಶ ನೀಡಿ ಎಂದು ರಾಜಕೀಯ ಪಕ್ಷಗಳ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಹಾಗೂ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್‍ಗೆ ವೆಂಕಟೇಶ್ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಕಣಕ್ಕಿಳಿಯಲು ನಟಿ ಸುಮಲತಾ, ನಟ ನಿಖಿಲ್ ಕುಮಾರಸ್ವಾಮಿ, ಲಕ್ಷ್ಮಿ ಅಶ್ವಿನ್ ಗೌಡ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ. ಆದ್ರೆ ಯೋಧನ ಪತ್ನಿ ಕಲಾವತಿ ಅವರನ್ನ ಸಂಸತ್‍ಗೆ ಅವಿರೋಧವಾಗಿ ಆಯ್ಕೆ ಮಾಡಿ ಕಳುಹಿಸಿಕೊಡುವ ಬಗ್ಗೆ ಎಲ್ಲಾ ಪಕ್ಷಗಳು ಮುಂದಾಗುವಂತೆ ಈ ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *