ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿಯಿಲ್ಲ: ಮಾಯಾವತಿ

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ರಾಜ್ಯದಿಂದಲೂ ನಾವು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಲು ಸಮಾಜವಾದಿ ಪಕ್ಷ (ಎಸ್‍ಪಿ) ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪರಸ್ಪರ ಗೌರವ ನೀಡಲು ಹಾಗೂ ಪ್ರಾಮಾಣಿಕ ಉದ್ದೇಶದಿಂದ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರ ಜೊತೆಗೆ ಕೈಜೋಡಿಸಿದ್ದೇವೆ. ಈ ಮೈತ್ರಿ ಬಿಜೆಪಿಯನ್ನು ಸೋಲಿಸಲು ಪರಿಪೂರ್ಣ ಶಕ್ತಿ ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ ಅವರು, ಬಿಎಸ್‍ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಅನೇಕ ಪಕ್ಷಗಳು ಮುಂದಾಗುತ್ತಿವೆ. ಚುನಾವಣೆ ಉದ್ದೇಶದಿಂದ ಮೈತ್ರಿಯನ್ನು ಮಾಡಿಕೊಂಡರೆ ಪಕ್ಷದ ಸಿದ್ಧಾಂತ, ಹೋರಾಟಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಎಸ್‍ಪಿ ಹೊರತಾಗಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲವೆಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎಗೆ 2019ರ ಚುನಾವಣೆಯಲ್ಲಿ ಬಹುಮತ ಸಿಗಬಾರದು ಎನ್ನುವುದು ಬಿಜೆಪಿ ವಿರೋಧಿ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಪಕ್ಷಗಳ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಇತ್ತ ಬಲಿಷ್ಠ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಹಾಗೂ ಬಿಜೆಪಿ ಹೊರತಾಗಿ ಮೈತ್ರಿ ಮಾಡಿಕೊಂಡರೆ, ಕೆಲವು ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿವೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಬಿಎಸ್‍ಪಿಯ ಮೈತ್ರಿಗೆ ಮುಂದಾಗಿತ್ತು. ಆದರೆ ಬಿಎಸ್‍ಪಿ ಇದಕ್ಕೆ ಅವಕಾಶ ನೀಡದೇ ಎಸ್‍ಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ.

ಆಮ್ ಆದ್ಮಿ ಪಾರ್ಟಿ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮೊನ್ನೆಯಷ್ಟೇ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲವೆಂದು ಸ್ಪಷ್ಟಪಡಿಸಿದರು. ದೆಹಲಿ ಲೋಕಸಭಾ ಕ್ಷೇತ್ರಗಳ ಮೈತ್ರಿಯಲ್ಲಿ ಕಾಂಗ್ರೆಸ್ ಅಹಂಕಾರ ತೋರಿದೆ. ಹೀಗಾಗಿ ಕಾಂಗ್ರೆಸ್‍ನ ಅಭ್ಯರ್ಥಿಗಳು ಠೇವಣಿ ಹಣವನ್ನು ಕಳೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *