ಹಳ್ಳಿಯಲ್ಲಿ ವೈದ್ಯರಾಗಲಿರುವ ವಿದ್ಯಾರ್ಥಿಗಳಿಗೆ ಶೇ.10 ಮೀಸಲಾತಿ

ಮುಂಬೈ: ವೈದ್ಯರಾದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕಾಯ್ದೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ಮಸೂದೆ ಅಂಗೀಕಾರವಾಗಿ ಕಾಯ್ದೆಯಾದ ಬಳಿಕ ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ, ದೀರ್ಘಾವಧಿಯ ಆಧಾರದ ಮೇಲೆ ಸ್ವಯಂಪ್ರೇರಣೆಯಿಂದ ತಮ್ಮ ಸೇವೆ ಸಲ್ಲಿಸಲು ಸಿದ್ಧರಿರುವ ಅಭ್ಯರ್ಥಿಗಳಿಗೆ ವೈದ್ಯಕೀಯ ಸ್ಥಾನಗಳನ್ನು ಕಾಯ್ದಿರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳು ಮುಂದೆ ವೈದ್ಯರಾದ ಬಳಿಕ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದರೆ ಅವರಿಗೆ ಈ ಹೊಸ ಮೀಸಲಾತಿ ದೊರಕುತ್ತದೆ. ಸರ್ಕಾರಿ ಆಸ್ಪತ್ರೆಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶ, ಬುಡಕಟ್ಟು ಪ್ರದೇಶಗಳಲ್ಲಿ ವೈದ್ಯರ ಕೊರತೆಯಿದೆ. ಹೀಗಾಗಿ ಈ ಕೊರತೆಯನ್ನು ನೀಗಿಸಲು ವೈದ್ಯಕೀಯ ಕಾಲೇಜುಗಳಿಗೆ ಈ ಹೊಸ ಮೀಸಲಾತಿ ವ್ಯವಸ್ಥೆಯನ್ನು ಪರಿಚಯಿಸಲು ಮಹಾರಾಷ್ಟ್ರ ಸರ್ಕಾರ ಪ್ಲಾನ್ ಮಾಡಿದೆ.

ಈ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಕೋರ್ಸ್ ಮುಗಿದ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ 5 ವರ್ಷಗಳ ಕಾಲ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎನ್ನುವ ಅಂಶ ಈ ಮಸೂದೆಯಲ್ಲಿ ಇರಲಿದೆ.

Comments

Leave a Reply

Your email address will not be published. Required fields are marked *