ದೀದಿ ಭಯಗೊಂಡು ದೇಶ ವಿರೋಧಿಗಳನ್ನು ಹಿಂಬಾಲಿಸುತ್ತಿದ್ದಾರೆ: ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಯಗೊಂಡು, ನಿರಾಶೆಗೆ ಒಳಗಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದ ಕೂಚ್ ಬೆಹರ್ ನಲ್ಲಿ ಇಂದು ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಅವರು ದೇಶ ವಿರೋಧಿಗಳನ್ನು ಹಿಂಬಾಲಿಸುತ್ತಿದ್ದಾರೆ. ಅವರನ್ನು ನೀವು ತುಂಬಾ ನಂಬಿದ್ದೀರಿ. ಆದರೆ ನಿಮ್ಮ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರ ಪ್ರಚಾರಕ್ಕಾಗಿ ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಬಂದಿದ್ದರು. ಆದರೆ ಅವರ ವಿಶೇಷ ಹೆಲಿಕಾಪ್ಟರ್ ಇಳಿಸಲು ಮಮತಾ ಬ್ಯಾನರ್ಜಿ ಸರ್ಕಾರ ಅವಕಾಶ ನೀಡಿರಲಿಲ್ಲ. ಈ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಅವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನರನ್ನು ಹೆದರಿಸುತ್ತಿದ್ದು, ರಾಜ್ಯದಲ್ಲಿ ನಾವು ಚುನಾವಣಾ ಪ್ರಚಾರ ಮಾಡದಂತೆ ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಮತಾ ಬ್ಯಾನರ್ಜಿ ಅವರು ದೇಶ ವಿರೋಧಿಗಳಿಗೆ ಬೆಂಬಲ ನೀಡುವ ಮೂಲಕ ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿದ್ದಾರೆ. ನಿಮ್ಮ ಚೌಕಿದಾರ್ ಆಗಿರುವ ನಾನು ನಾಗರಿಕತ್ವ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಿದ್ದೇನೆ. ಈ ಮೂಲಕ ದೇಶದ ಮೇಲೆ ಗೌರವ, ನಂಬಿಕೆ ಹೊಂದಿರುವ ಮಾತೃ ಭಾರತದ ಮಕ್ಕಳ ರಕ್ಷಣೆಗಾಗಿ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *