ಪೌರತ್ವ ಕಾಯ್ದೆ ವಿರೋಧ – ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಮುಸ್ಲಿಮರ ಪ್ರತಿಭಟನೆ

ಮಂಡ್ಯ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದ ನಾಗಮಂಗಲದಲ್ಲಿ ಜೆಡಿಎಸ್ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ನೂರಾರು ಮುಸ್ಲಿಮರು ಪ್ರತಿಭಟನೆ ನಡೆಸಿದರು.

ನಾಗಮಂಗಲದ ಮಂಡ್ಯ ರಸ್ತೆಯಲ್ಲಿರುವ ಮಸೀದಿ ಬಳಿ ಜಮಾವಣೆಗೊಂಡು ಪ್ರತಿಭಟನಾಕಾರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪ್ರತಿಭಟನೆ ಆರಂಭಿಸಿದರು. ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಿರುವುದಕ್ಕೆ ಕಿಡಿಕಾರಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು. ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಸುರೇಶ್ ಗೌಡ, ಕೇಂದ್ರದ ಬಿಜೆಪಿ ಸರ್ಕಾರ ಆರ್ಥಿಕ ಪರಸ್ಥಿತಿಯನ್ನ ಅಧೋಗತಿಗೆ ತಳ್ಳಿದೆ. ಅದನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ಕಾನೂನು ತರುವ ಕೆಲಸಕ್ಕೆ ಮುಂದಾಗಿದ್ದು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಭೀತಿ ಹುಟ್ಟಿಸುವ ಕೆಲಸಕ್ಕೆ ಮುಂದಾಗಿದೆ. ಇದು ಆರ್.ಎಸ್.ಎಸ್. ಅಜೆಂಡಾ. ಅಲ್ಪಸಂಖ್ಯಾತರನ್ನು ದೇಶದಲ್ಲಿ ಅಲ್ಪಸಂಖ್ಯಾತರನ್ನಾಗಿಯೇ ಇಡಲು ಈ ರೀತಿ ಮಾಡುತ್ತಿದೆ ಎಂದು ಕಿಡಿಕಾರಿದರು.

Comments

Leave a Reply

Your email address will not be published. Required fields are marked *