ಆಯ್ದ ವಿಡಿಯೋಗಳನ್ನು ಮಾತ್ರ ಬಿಡುಗಡೆ ಮಾಡೋದನ್ನು ನಿಲ್ಲಿಸಿ: ಪೊಲೀಸ್ ಆಯುಕ್ತ ಹರ್ಷ

ಮಂಗಳೂರು: ನಗರದಲ್ಲಿ ಡಿಸೆಂಬರ್ 18ರಂದು ನಡೆದ ಗೋಲಿಬಾರ್ ಹಾಗೂ ಗಲಭೆಗೆ ಸಂಬಂಧಿಸಿದ ಆಯ್ದ ವಿಡಿಯೋಗಳನ್ನು ಮಾತ್ರ ಬಿಡುಗಡೆ ಮಾಡುವುದನ್ನು ನಿಲ್ಲಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಹೇಳಿದ್ದಾರೆ.

ಮಂಗಳೂರು ಗಲಭೆ ಸಂಬಂಧ ವಾಟ್ಸಪ್‍ನಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ಕೆಲವರು ಆಯ್ದ ವಿಡಿಯೋವನ್ನು ತಮಗೆ ಬೇಕಾದ ರೀತಿ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಗಲಭೆಗೆ ಸಂಬಂಧಿಸಿದ ವಿಡಿಯೋಗಳನ್ನು ಅನುಕ್ರಮದಲ್ಲಿ ಹಾಗೂ ಸರಿಯಾದ ಸಂದರ್ಭಗಳೊಂದಿಗೆ ಹೊಂದಿಸಿ ನೋಡದಿದ್ದರೆ ನೈಜ ಚಿತ್ರಣವನ್ನು ಅರಿಯಲು ಸಾಧ್ಯವಾಗುವುದಿಲ್ಲ ಎಂದರು.

ಸಿಐಡಿ ಮತ್ತು ಮ್ಯಾಜಿಸ್ಟ್ರೀಯಲ್ ತನಿಖೆ ಬಳಿಕ ಮಂಗಳೂರು ಗಲಭೆಯ ಮೂಲ ಸತ್ಯ ಬಯಲಾಗಲಿದೆ. ಅಲ್ಲಿಯವರೆಗೆ ಎಡಿಟ್ ಮಾಡಿದ ವಿಡಿಯೋಗಳನ್ನು ಬಿಡುಗಡೆ ಮಾಡುವುದನ್ನು ನಿಲ್ಲಿಸಿ ಎಂದು ಹೇಳಿದರು.

ಗಲಭೆಯ ಸತ್ಯಾಂಶ ಮುಂದೆ ತನಿಖೆಯಲ್ಲಿ ತಿಳಿದು ಬರಲಿದೆ. ಈಗಾಗಲೇ ಪೊಲೀಸರು ಗಲಭೆಯ ಎಲ್ಲಾ ವಿಡಿಯೋಗಳನ್ನು ತನಿಖಾ ಸಂಸ್ಥೆಗಳಿಗೆ ನೀಡಿದ್ದಾರೆ. ಡಿಸೆಂಬರ್ 19ರಂದು ಮಂಗಳೂರು ಪೊಲೀಸರು ಗಲಭೆ ನಿಯಂತ್ರಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *