ಬಡವರಿಗೆ ಊಟ ನೀಡದೆ ಖಾಸಗಿ ಆಸ್ಪತ್ರೆಗೆ ಕಟೀಲಿನಿಂದ ಆಹಾರ ರವಾನೆ

ಮಂಗಳೂರು: ನಿರ್ವಸಿತ ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳಿಂದ ಊಟ ನೀಡಲು ಸರಕಾರ ಆದೇಶ ಮಾಡಿದೆ. ಆದರೆ ಎ ದರ್ಜೆಯ ಹೆಚ್ಚಿನ ದೇವಸ್ಥಾನಗಳಿಂದ ಈ ಆದೇಶ ಪಾಲನೆಯಾಗುತ್ತಿಲ್ಲ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಎ ದರ್ಜೆಯ ದೇವಸ್ಥಾನ ಆಗಿರುವ ಕಟೀಲು ದುರ್ಗಾಪರಮೇಶ್ವರಿ ದೇಗುಲದಿಂದ ಖಾಸಗಿ ಕೆಎಂಸಿ ಆಸ್ಪತ್ರೆಗೆ ಗುಪ್ತವಾಗಿ ಊಟ ರವಾನಿಸುತ್ತಿರುವ ವಿಡಿಯೋ ಈಗ ಹರಿದಾಡುತ್ತಿದೆ. ದೇವಸ್ಥಾನದ ಅಕ್ಕಿ ಬಳಸಿ, ಅಲ್ಲಿನ ಅಡುಗೆ ಕಾರ್ಮಿಕರ ಮೂಲಕ ಊಟ ರೆಡಿ ಮಾಡಲಾಗುತ್ತಿದ್ದು ದಿನವೊಂದಕ್ಕೆ ಎರಡು ಸಾವಿರ ಜನರಿಗೆ ಊಟ ತಯಾರಿಸಿ ಕೊಡಲಾಗುತ್ತಿದೆ. ದೇವಸ್ಥಾನದ ದುಡ್ಡಲ್ಲಿ ಊಟ ರೆಡಿ ಮಾಡಿಸಿ, ಕೆಎಂಸಿ ಆಸ್ಪತ್ರೆಗೆ ಮಾರಾಟ ಮಾಡಲಾಗುತ್ತಿದೆ ಅನ್ನುವ ಆರೋಪ ಕೇಳಿಬಂದಿದೆ.

ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ಇಲ್ಲದಿರುವ ಸಂದರ್ಭ ಇಷ್ಟೊಂದು ಭೋಜನ ತಯಾರಿಸುತ್ತಿರುವುದಲ್ಲದೆ, ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್ ನಲ್ಲಿ ಊಟ ರವಾನಿಸುತ್ತಿರುವ ಬಗ್ಗೆ ಸಾರ್ವಜನಿಕರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ದೇವಸ್ಥಾನದ ಆಡಳಿತ ವಹಿಕೊಂಡಿರುವ ಆಸ್ರಣ್ಣರ ಕಾರುಬಾರಿನಲ್ಲಿ ಸರ್ಕಾರಿ ದೇವಸ್ಥಾನದಿಂದ ಊಟ ಮಾರಾಟ ಮಾಡಲಾಗುತ್ತಿದೆಯೇ ಅನ್ನುವ ಪ್ರಶ್ನೆ ಎದುರಾಗಿದೆ.

ಬಡ ಕೂಲಿ ಕಾರ್ಮಿಕರಿಗೆ ಊಟ ಪೂರೈಸುವ ಬಗ್ಗೆ ಪ್ರಶ್ನೆ ಮಾಡಿದರೆ ಅಡುಗೆ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ ಎಂದು ನೆಪ ಹೇಳುತ್ತಾರೆ. ಈಗ ಕೆಎಂಸಿ ಅಂಬುಲೆನ್ಸ್ ನಲ್ಲಿ ಊಟ ರವಾನಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

Comments

Leave a Reply

Your email address will not be published. Required fields are marked *