ಚಾಮರಾಜನಗರ/ ಮೈಸೂರು: ಮಾರಮ್ಮ ದೇವಸ್ಥಾನ ಪ್ರಸಾದ ಸೇವಿಸಿ ಮೃತಪಟ್ಟ ಸದಸ್ಯರ ಕುಟುಂಬಸ್ಥರನ್ನು ತನ್ನ ಬಳಿ ಕರೆಯಿಸಿ ಪರಿಹಾರ ಧನ ನೀಡಲು ಮುಂದಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತುಕೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಬಿದರಹಳ್ಳಿಯಿಂದ 50 ಕಿಮೀ ದೂರವಿರುವ ಹನೂರಿನಲ್ಲಿ ಪರಿಹಾರ ಧನ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಒಂದೇ ಗ್ರಾಮದ 8 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮದಲ್ಲೇ ಪರಿಹಾರ ಧನ ನೀಡುವ ಬದಲು 50 ಕಿ.ಮೀ ದೂರದಲ್ಲಿ ನೀಡುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರವಾದ ಬಳಿಕ ಸಚಿವ ಪುಟ್ಟರಂಗಶೆಟ್ಟಿ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಬಿದರಹಳ್ಳಿಗೆ ಶಿಫ್ಟ್ ಮಾಡಿದ್ದಾರೆ.

ಮೈಸೂರಿನ ಕೆ.ಆರ್ ಆಸ್ಪತ್ರೆ ಬಳಿ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ, ಮೃತರ ಮನೆಗಳಿಗೆ ತೆರಳಿ ಪರಿಹಾರ ವಿತರಿಸುವುದಾಗಿ ಹೇಳಿದ್ದಾರೆ. ಎಲ್ಲರಿಗೂ 5 ಲಕ್ಷ ಪರಿಹಾರ ನೀಡುತ್ತೇವೆ. ಜೊತೆಗೆ ವೈಯಕ್ತಿಕವಾಗಿಯೂ ನಾನು, ನರೇಂದ್ರರವರು ಪರಿಹಾರ ನೀಡುತ್ತೇವೆ ಎಂದರು. ಇದನ್ನೂ ಓದಿ: “ಮೃತರ ಮನೆಗೆ ಸಚಿವರು ಹೋಗಬೇಕೋ? ಮೃತರ ಮನೆಯವರು ಸಚಿವರ ಬಳಿ ಹೋಗಬೇಕೋ?”

ವಿಷ ಪ್ರಸಾದ ಸೇವಿಸಿ ಒಂದೇ ಗ್ರಾಮ ಬಿದರಹಳ್ಳಿಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಹೀಗಿರುವಾಗ ಗ್ರಾಮಕ್ಕೆ ಸಚಿವರು ಬರುವ ಬದಲು ಜನರನ್ನೇ ತಮ್ಮ ಬಳಿ ಕರೆಸಿಕೊಳ್ಳುತ್ತಿದ್ದಾರೆ. ಕುಟುಂಬದವರು ಮೊದಲೇ ಕುಟುಂಬ ಸದಸ್ಯರನ್ನು ಕಳೆದುಕೊಂಡು ದುಃಖಿತರಾಗಿದ್ದು, ಹಣ ಪಡೆಯಲು ಈಗ 50 ಕಿ.ಮೀ ಪ್ರಯಾಣಿಸಬೇಕೇ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದರು.
ಮೃತರ ಮನೆಗೆ ಸಚಿರು ಹೋಗಬೇಕೋ? ಸತ್ತವರ ಮನೆಯವರು ಸಚಿವರ ಬಳಿ ಹೋಗಬೇಕೋ? ಮತ ಹಾಕಿಸಿಕೊಳ್ಳಲು ಮನೆ ಮುಂದೆ ಬರುತ್ತಾರೆ. ಈಗ ಜನರೇ ಅವರ ಬಳಿ ಹೋಗಬೇಕೇ? ಯಾವ ಸಮಯದಲ್ಲಿ ಯಾವ ರೀತಿ ವ್ಯವಹರಿಸಬೇಕು ಎನ್ನುವ ಕನಿಷ್ಟ ಜ್ಞಾನ ಸಚಿವರಿಗಿಲ್ಲವೇ ಎಂದು ಪ್ರಶ್ನಿಸಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply