10ನೇ ತರಗತಿ ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಎದುರಿಸಿ: ಸುರೇಶ್ ಕುಮಾರ್

– ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಸಚಿವರ ಕಿವಿ ಮಾತು

ಮಡಿಕೇರಿ: ಈ ಬಾರಿ ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯುವುದಿಲ್ಲ, ಈಗಾಗಲೇ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಗೊಂದಲವಿಲ್ಲದೆ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಿರಿ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ ನೀಡಿದರು.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲಿನ ಕೊಡವ ಸಮಾಜ ಮತ್ತು ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಹತ್ತನೆ ತರಗತಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹತ್ತನೆ ತರಗತಿ ಪ್ರಶ್ನೆ ಪತ್ರಿಕೆ ಗೊಂದಲ, ಪತ್ರಿಕೆ ಮಾದರಿಗಳ ಬಗ್ಗೆ ಪ್ರಶ್ನಿಸಿದರು. ಅಲ್ಲದೆ ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವ ವಿಷಯಕ್ಕೂ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಗಂಭೀರವಾಗಿ ಪ್ರಶ್ನಿಸಿದರು. ಇದಕ್ಕೆ ಸಚಿವರು ಸಮಾಧಾನದಿಂದಲೇ ಉತ್ತರಿಸಿದರು.

ಈ ಬಾರಿ ಪರೀಕ್ಷೆ ಸಂದರ್ಭ ಯಾವುದೇ ಗೊಂದಲಗಳಿರುವುದಿಲ್ಲ. ಸಿದ್ಧತಾ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸೋರಿಕೆ ಮಾಡಿದವರು ಯಾರು ಎಂಬುದನ್ನು ಗುರುತಿಸಲಾಗಿದೆ. ಅವರ ವಿರುದ್ಧ ಶಿಸ್ತು ಕ್ರಮವನ್ನೂ ವಹಿಸಲಾಗುವುದು. ಆದರೆ ಮುಖ್ಯ ಪರೀಕ್ಷೆ ಸಂದರ್ಭದಲ್ಲಿ ಇಂತಹ ಯಾವುದೇ ಸಮಸ್ಯೆಗಳಾಗುವುದಿಲ್ಲ. ಧೈರ್ಯವಾಗಿ ಪರೀಕ್ಷೆ ಎದುರಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಬಳಿಕ ನಾಪೋಕ್ಲು ಸರ್ಕಾರಿ ಶಾಲೆಯಲ್ಲಿ ಆರಂಭವಾದ ಪದವಿ ಪೂರ್ವ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿದರು. ನಂತರ ಅಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.

Comments

Leave a Reply

Your email address will not be published. Required fields are marked *