ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಕೈಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಪತ್ರ

ಮಡಿಕೇರಿ: ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‍ಗೆ ಪತ್ರ ಬರೆದಿರುವ ಅವರು, ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಆದರೆ ಸ್ವಾತಂತ್ರ್ಯ ಹೋರಾಟಗಾರ ಎಂದು ಪಠ್ಯಪುಸ್ತಕಗಳಲ್ಲಿ ವೈಭವೀಕರಿಸಲಾಗಿದೆ. ಟಿಪ್ಪು ಫ್ರೆಂಚ್‍ರೊಂದಿಗೆ ಕೈ ಜೋಡಿಸಿದ್ದ, ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ ಸಹಾಯ ಪಡೆಯುತ್ತಿದ್ದನು. ಅಲ್ಲದೆ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು. ಕೊಡಗಿನಲ್ಲಿಯೂ ಹಿಂದೂಗಳನ್ನು ಮತಾಂತರ ಮಾಡಿದ್ದ ಮತ್ತು ಹತ್ಯೆ ಮಾಡಿದ್ದ. ಟಿಪ್ಪು ಒಬ್ಬ ಮತಾಂಧನಾಗಿದ್ದ. ಇಂತಹವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಎಲ್ಲ ಕಾರಣಗಳಿಂದ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *