ಡಿಕೆಶಿ ಕ್ಷೇಮ ವಿಚಾರಿಸಿ, ಡಿ.ಕೆ.ಸುರೇಶ್‍ಗೆ ನೈತಿಕ ಸ್ಥೈರ್ಯ ತುಂಬಿದ ಸೋನಿಯಾ ಗಾಂಧಿ

ನವದೆಹಲಿ: ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕುಟುಂಬಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಯ ನೀಡಿದ್ದಾರೆ.

ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ.ಸುರೇಶ್ ಅವರಿಗೆ ಮಂಗಳವಾರ ದೂರವಾಣಿ ಕರೆ ಮಾಡಿ ತಮ್ಮ ನಿವಾಸ ಜನಪಥ್‍ಗೆ ಆಹ್ವಾನಿಸಿದರು. ನಿವಾಸಕ್ಕೆ ಆಗಮಿಸಿದ ಡಿ.ಕೆ.ಸುರೇಶ್ ಅವರನ್ನು ಡಿ.ಕೆ.ಶಿವಕುಮಾರ್ ಹೇಗಿದ್ದಾರೆ? ಆರೋಗ್ಯ ಹೇಗಿದೆ ಎಂದು  ಸೋನಿಯಾ ಗಾಂಧಿ ವಿಚಾರಿಸಿದ್ದಾರೆ. ಈ ಮೂಲಕ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷವು ಡಿ.ಕೆ.ಶಿವಕುಮಾರ್ ಅವರ ಜೊತೆಗಿದೆ. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ. ನೀವು ಡಿ.ಕೆ.ಶಿವಕುಮಾರ್ ಅವರಿಗೆ ಧೈರ್ಯ ತುಂಬಿ. ಅದು ಕಾನೂನು ಹೋರಾಟವೇ ಇರಲಿ, ರಾಜಕೀಯ ಹೋರಾಟವೇ ಇರಲಿ ನಿಮ್ಮೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ನೈತಿಕ ಸ್ಥೈರ್ಯ ತುಂಬಿದ್ದಾರೆ.

ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಪ್ರಬಲ ವಿರೋಧಿಗಳನ್ನು ಹತ್ತಿಕ್ಕಲು ಮುಂದಾಗುತ್ತಿದೆ. ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ. ಡಿ.ಕೆ.ಶಿವಕುಮಾರ್ ಅವರು ಸಮರ್ಥವಾಗಿ ಎಲ್ಲವನ್ನೂ ಎದುರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *