ಎಂಟಿಬಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಆರೋಪಿ ವಶಕ್ಕೆ – ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಫೇಸ್ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಕಾರ್ಯಕರ್ತನನ್ನು ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಟಿಬಿ ನಾಗರಾಜ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಫಾರ್ವರ್ಡ್ ಮಾಡಿದ ಆರೋಪದಡಿ ರವಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರ ತಿಳಿದ ಹೆಬ್ಬಾಳ ಶಾಸಕ ಭೈರತಿ ಸುರೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು.

ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ.ಡಿ.ಚನ್ನಣ್ಣನವರ್ ಮಧ್ಯಸ್ಥಿತಿಕೆಯಲ್ಲಿ ಶಾಸಕ ಭೈರತಿ ಸುರೇಶ್ ಜೊತೆ ಮಾತನಾಡಿ ಪ್ರಕರಣ ಬಗೆಹರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತನನ್ನು ವಿಚಾರಣೆ ನಡೆಸಿ ಅರ್ಜಿ ಬರೆಸಿಕೊಂಡು ಬಿಟ್ಟು ಕಳುಹಿಸಲಾಗಿದೆ. ಈ ಮೂಲಕ ರಾಜಕೀಯ ಹೈ ಡ್ರಾಮಾಕ್ಕೆ ಎಸ್‍ಪಿ ರವಿ.ಡಿ.ಚನ್ನಣ್ಣವರ್ ಫುಲ್ ಸ್ಟಾಪ್ ಹಾಕಿದ್ದಾರೆ.

ಕಾಂಗ್ರೆಸ್ ಕಾರ್ಯರ್ತನನ್ನು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಭೈರತಿ ಸುರೇಶ್, ಅನರ್ಹ ಶಾಸಕ ಎಂಟಿಬಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಟಬಿಯವರೇ ನಿಮ್ಮ ಹಣಬಲ ತೊಳ್ಬಲ ಇನ್ನು ಮುಂದೆ ನಡೆಯುವುದಿಲ್ಲ. ಹೊಸಕೋಟೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.

ರಾಜಕೀಯ ಹೈಡ್ರಾಮದ ಬಗ್ಗೆ ಮಾತನಾಡಿದ ಎಸ್‍ಪಿ ರವಿ.ಡಿ.ಚನ್ನಣ್ಣನವರ್, ಇನ್ನು ಮುಂದೆ ಯಾವುದೇ ಕಾರಣಕ್ಕೂ ಯಾರಾದರೂ ಅವಹೇಳನಕಾರಿ ಪೋಸ್ಟ್‍ಗಳನ್ನು ವಾಟ್ಸಪ್ ಹಾಗೂ ಫೇಸ್ಬುಕ್‍ಗಳಲ್ಲಿ ಹಾಕಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಲ್ಲದೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಕೊಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *