ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ.

ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪೇರೆಡ್ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮುಸ್ಲಿಂ ಯುವಕರನ್ನು ಬಂಧಿಸಿದ್ದರು.

ನಂತರ ಅವರು ಪಿಎಸ್‍ಎಫ್ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದನ್ನು ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಕೆಆರ್ ಪೇಟೆ ಭಾಗದಲ್ಲಿ ದೇಶ ವಿರೋಧಿ ಚಟುವಟಿಗಳು ನಡೆಯುತ್ತಿವೆ. ಆದರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ಸಹ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿದ್ದಾರೆ.

ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಯುವಕರ ಮೇಲೆ ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಬಿಡುಗಡೆ ಮಾಡಿರುವ ಯುವಕರನ್ನು ಮತ್ತೆ ಬಂಧಿಸಿ, ಕೆಆರ್ ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ.

ಕೆಆರ್ ಪೇಟೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲು ಈಗಾಗಲೇ ಸಂಘಟನೆಗಳು ನಿರ್ಧರಿಸಿವೆ. ಈ ಪ್ರತಿಭಟನೆಯಲ್ಲಿ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *