ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ

ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಿನ್ನೆ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆದು ಹಾಕಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಭಾನುವಾರ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿದ್ದ ತನ್ವೀರ್ ಸೇಠ್ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿತ್ತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರಗೆ ದಾಖಲು ಮಾಡಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯರು ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟಿದ್ದರು.

ಈ ವಿಚಾರವಾಗಿ ಸೋಮವಾರ ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ ಉಪೇಂದ್ರ ಶಣೈ, ಅವರಿಗೆ ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ ಶುಗರ್ ಅನ್ನು ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇಂದು ಆರೋಗ್ಯ ಸ್ಥಿತಿ ಸುಧಾರಿಸಿದ್ದು, ನಿನ್ನೆ ರಾತ್ರಿಯಿಂದ ತನ್ವೀರ್ ಸೇಠ್‍ಗೆ ಅಳವಡಿಸಿದ್ದ ವೆಂಟಿಲೇಟರ್ ತೆರವು ಮಾಡಲಾಗಿದೆ. ಸೇಠ್ ಅವರು ವೆಂಟೆಲೇಟರ್ ಇಲ್ಲದೆ ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ಇಂದು ಇಡೀ ದಿನ ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ಮಾಡಿ ಆರೋಗ್ಯದಲ್ಲಿ ಚೇತರಿಕೆ ಕಂಡರೆ ವಾರ್ಡ್‍ಗೆ ಶಿಫ್ಟ್ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

ಭಾನುವಾರ ರಾತ್ರಿ ಮೈಸೂರಿನ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Comments

Leave a Reply

Your email address will not be published. Required fields are marked *