ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಎಸ್‍ಟಿಎಸ್ ಸೂಚನೆ

ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ನಕಲಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌ ಮೇಲೆ ಅಧಿಕಾರಿಗಳ ದಾಳಿ

ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಖ್ಯಾತಿ ಆಗಿದೆ. ನಿತ್ಯ ನೂರು ಟನ್‍ಗೂ ಹೆಚ್ಚು ತುಪ್ಪ ಉತ್ಪಾದನೆ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಹಾರಾಷ್ಟ್ರದ ಗಡಿಯ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಕೆ

ಕಲಬೆರೆಕೆ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಸಹ ಕೆಎಂಎಫ್ ಜೊತೆ ಕೈಜೋಡಿಸಬೇಕು. ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಸಿದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

Comments

Leave a Reply

Your email address will not be published. Required fields are marked *