ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ

ನವದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯ(ಇಡಿ) ಬಳಿ ಮನವಿ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ವಿಚಾರವಾಗಿ ಇಂದು ವಿಚಾರಣೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಲು ಬದಲಿ ದಿನಾಂಕ ಕೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು.

ಜೂನ್ 2 ರಂದು ರಾಹುಲ್ ಗಾಂಧಿ ಮತ್ತು ಜೂನ್ 8 ರಂದು ಸೋನಿಯಾ ಗಾಂಧಿ ವಿಚಾರಣೆಗೆ ಆಗಮಿಸಬೇಕೆಂದು ಸಮನ್ಸ್‌ನಲ್ಲಿ ತಿಳಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಲು ಇಡಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆನಾರ್ಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಇಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು.

Comments

Leave a Reply

Your email address will not be published. Required fields are marked *