ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ನನ್ನ ಮಾತಿಗೆ ಬದ್ಧ: ಸಿದ್ದರಾಮಯ್ಯ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಇದೇ ನನ್ನ ಕೊನೆ ಚುನಾವಣೆ, ಮುಂದಿನ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೆ. ಈ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಸಮನ್ವಯ ಸಮಿತಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ. 5 ವರ್ಷ ಆದ ಮೇಲೆ ಜನಾಶೀರ್ವಾದ ಮಾಡಿದರೆ ಸಿಎಂ ಆಗುವ ಕುರಿತು ಹೇಳಿದ್ದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳು ಸಹಜವಾಗಿ ಹೆಚ್ಚಾಗಿದ್ದು, ಸದ್ಯ ಊಹಾತ್ಮಾಕ ಪತ್ರಿಕೋದ್ಯಮ ಜಾಸ್ತಿ ಆಗುತ್ತಿದೆ. ಆದರೆ ಈ ಹಿಂದೆ ಹೇಳಿದ ಮಾತಿಗೆ ತಾನು ಬದ್ಧವಾಗಿದ್ದು, ಮುಂದಿನ ಚುನಾವಣೆಯಲ್ಲಿ ಜನರಿಗೆ ನಾನು ಬೇಕು ಅಂದರೆ ಸಿಎಂ ಮಾಡುತ್ತಾರೆ ಎಂದು ಹೇಳಿದಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ಸಮ್ಮಿಶ್ರ ಸರ್ಕಾರದ 13 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವಿಚಾರವಾಗಿ ಪತ್ರಿಕ್ರಿಯೆ ನೀಡಿ, ಇಂತಹ ಹೇಳಿಕೆಗಳು ಕೇವಲ ಊಹಾಪೋಹ ಅಷ್ಟೇ. ಇಂತಹ ಹೇಳಿಕೆಗಳ ಕುರಿತು ನಾನು ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಉತ್ತಮ ದಿಕ್ಕಿನಲ್ಲಿ ಸಾಗುತ್ತಿದ್ದು, ಈ ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಮುಂದುವರೆಯಲಿದೆ. ಅನ್ನಭಾಗ್ಯ ಯೋಜನೆಯಲ್ಲಿ ನೀಡುವ 7 ಕೆ.ಜಿ ಅಕ್ಕಿಯನ್ನು ಸರ್ಕಾರ ವಿತರಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *