ಬಾಡೂಟ ತ್ಯಜಿಸಿ ನೆರೆ ಸಂತ್ರಸ್ತರಿಗೆ 10 ಲಕ್ಷ ರೂ. ನೀಡಲು ಕೈದಿಗಳ ನಿರ್ಧಾರ

ಬೆಂಗಳೂರು: ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಪ್ರದೇಶದಲ್ಲಿ ಉಂಟಾದ ಪ್ರವಾಹದಿಂದಾಗಿ ಅನೇಕ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ನೆರೆ ಸಂತ್ರಸ್ತರಿಗೆ ರಾಜ್ಯದ ಮೂಲೆ ಮೂಲೆಯಿಂದ ಜನರು ಸಹಾಯ ಹಸ್ತ ಚಾಚುತ್ತಿದ್ದಾರೆ. ಈ ಬೆನ್ನಲ್ಲೇ ಕೈದಿಗಳು ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿ ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳು ಇಂತಹ ನಿರ್ಧಾರಕ್ಕೆ ಮುಂದಾಗಿದ್ದಾರೆ. ಅವರ ಈ ನಿರ್ಧಾರಕ್ಕೆ ಅಧಿಕಾರಿಗಳು ಮೆಚ್ಚು ವ್ಯಕ್ತಪಡಿಸಿದ್ದು, 10 ಲಕ್ಷ ರೂ.ಯನ್ನು ಸಿಎಂ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಕೈದಿಗಳು, ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹ ಸ್ಥಿತಿಯನ್ನು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇವೆ. ಪ್ರವಾಹದಿಂದಾಗಿ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿರುವುದು ನೋವು ತಂದಿದೆ. ನೆರೆ ಸಂತ್ರಸ್ತರಿಗೆ ತಮ್ಮಿಂದ ಆಗುವ ಸಹಾಯ ಮಾಡಲು ಮುಂದಾಗಿದ್ದೇವೆ. ಜೈಲಿನಲ್ಲಿ ಪ್ರತಿ ಶುಕ್ರವಾರ ನೀಡುತ್ತಿರುವ ಬಾಡೂಟವನ್ನು ನಾಲ್ಕು ವಾರ ನೀಡುವುದು ಬೇಡ. ಹೀಗೆ ಮಾಡಿದರೆ ಸುಮಾರು 10 ಲಕ್ಷ ರೂ. ಉಳಿತಾಯವಾಗಲಿದ್ದು, ಆ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಬೇಕು ಎಂದು ಕೋರಿದ್ದಾರೆ.

Comments

Leave a Reply

Your email address will not be published. Required fields are marked *